News Karnataka Kannada
Saturday, April 27 2024
ಮಡಿಕೇರಿ

ಮಡಿಕೇರಿ: ಡಿ.24 ಮತ್ತು 25 ರಂದು ‘ಜೇನು ಹಬ್ಬ’, ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಮನವಿ

Madikeri: The Deputy Commissioner has appealed to the people to take advantage of the 'Honey Festival' on Dec. 24 and 25.
Photo Credit : By Author

ಮಡಿಕೇರಿ, ಡಿ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಮಡಿಕೇರಿ ಕೃಷಿ ವಿಸ್ತರಣಾ ಘಟಕ, ಭಾಗಮಂಡಲ ಮತ್ತು ವಿರಾಜಪೇಟೆ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ ಇವರ ಸಹಯೋಗದಲ್ಲಿ ನಗರದ ರಾಜಸೀಟು ಉದ್ಯಾನವನದಲ್ಲಿ ಡಿಸೆಂಬರ್, 24 ಮತ್ತು 25 ರಂದು ‘ಜೇನು ಹಬ್ಬ’ ನಡೆಯಲಿದ್ದು, ಜಿಲ್ಲೆಯ ಜೇನು ಕೃಷಿಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಕೊಡಗು ಜೇನು ಕೃಷಿಗೆ ಹೆಸರುವಾಸಿಯಾಗಿದ್ದು, ಜೇನು ಕೃಷಿ ಉತ್ತೇಜಿಸುವ ನಿಟ್ಟಿನಲ್ಲಿ ‘ಜೇನು ಹಬ್ಬ’ವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಡಿಕೇರಿ ರಾಜಸೀಟು ಸೇರಿದಂತೆ ವಿವಿಧ ಪ್ರದೇಶಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರ ವಿಶೇಷ ಮೇಳವನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ಮುಂದಿನ ದಿನಗಳಲ್ಲಿ ವೈನ್ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ. ಜೊತೆಗೆ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಅವರು ಇದುವರೆಗೆ 20 ವಿವಿಧ ಜೇನು ಉತ್ಪನ್ನ ಸಹಕಾರ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದು, ಪುತ್ತೂರು, ಸುಳ್ಯ ಭಾಗದಿಂದಲೂ ಜೇನು ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಅವಕಾಶ ಕಲ್ಪಿಸುವಂತೆ ಅರ್ಜಿ ಸಲ್ಲಿಕೆಯಾಗಿದ್ದು, ಎಲ್ಲರಿಗೂ ಅವಕಾಶ ನೀಡಲಾಗುವುದು ಎಂದರು.

ಜೇನು ಕೃಷಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತೀ ಆರ್ಥಿಕ ವರ್ಷದಲ್ಲಿ ಸಹಾಯಧನ ಕಲ್ಪಿಸಲಾಗುತ್ತದೆ. ಇದೊಂದು ನಿರಂತರ ಕಾರ್ಯಕ್ರಮವಾಗಿದೆ ಎಂದು ಪ್ರಮೋದ್ ಅವರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಜೇನು ಕೃಷಿ ಅಭಿವೃದ್ಧಿ ಅಧಿಕಾರಿ ಬಿ.ಡಿ.ವಸಂತ ಇತರರು ಇದ್ದರು.

ಮತ್ತಷ್ಟು ಮಾಹಿತಿ: ಕೊಡಗು ಜಿಲ್ಲೆಯಲ್ಲಿ ಹಿಂದೆ ಜೇನು ಕೃಷಿಯು ಒಂದು ಪ್ರಮುಖ ಉಪ ಕಸುಬು ಆಗಿ ಹೆಚ್ಚು ಪ್ರಸಿದ್ಧಿ ಹೊಂದಿ, ರೈತರ ಜೀವನೋಪಾಯದ ಮುಖ್ಯ ಆಧಾರವಾಗಿತ್ತು. ಆದರೆ ನಂತರದಲ್ಲಿ ಥಾಯ್ಯಶಾಕ್ ಬ್ರೂಡ್ ಎಂಬ ವೈರಸ್ ರೋಗದಿಂದ ಕೊಡಗಿನಲ್ಲಿ ಜೇನು ಕೃಷಿಯು ಅವನತಿಯ ಹಾದಿ ತಲುಪಿತು. ಆದರೆ ಕಳೆದ 10-12 ವರ್ಷಗಳಲ್ಲಿ ಕೊಡಗಿನಲ್ಲಿ ಜೇನು ಕೃಷಿಯು ಪುನಶ್ಚೇತನದ ಹಾದಿ ಹೊಂದಿದ್ದು, ಹೆಚ್ಚು ರೈತರು ಜೇನು ಕೃಷಿಯತ್ತ ಆಸಕ್ತಿ ತೋರುತ್ತಿದ್ದಾರೆ.

ಕೊಡಗಿನ ಜೇನು ಪಶ್ಚಿಮ ಘಟ್ಟದ ಕಾಡುಗಳಲ್ಲಿ ಬರುವ ವಿವಿಧ ಜಾತಿಯ ಮರ, ಗಿಡ, ಬಳ್ಳಿಗಳ ಪುಷ್ಪಗಳಿಂದ ಮಕರಂಧ ಮತ್ತು ಪರಾಗವನ್ನು ಸಂಗ್ರಹಿಸಿ, ಜೇನು ತುಪ್ಪದ ಉತ್ಪಾದನೆ ಮಾಡುವುದರಿದ ಕೊಡಗಿನ ಜೇನು ಹೆಚ್ಚು ಶ್ರೇಷ್ಠವಾಗಿದ್ದು, ಔಷಧಿಯ ಗುಣ ಹೊಂದಿದೆ. ಆದ್ದರಿಂದ ಕೊಡಗಿನ ಜೇನಿಗೆ ಮಾರುಕಟ್ಟೆಯಲ್ಲಿ ಹೆಚ್ಚಿಗೆ ಬೇಡಿಕೆ ಇದೆ.

ಒಟ್ಟಾರೆ ಕೊಡಗು ಜಿಲ್ಲೆಯಲ್ಲಿ 12,897 ಸಂಖ್ಯೆಯ ಜೇನು ಕೃಷಿಕರಿದ್ದು, ಜೇನು ಪೆಟ್ಟಿಗೆಯು 60,500 ಕ್ಕೂ ಹೆಚ್ಚು ಇದ್ದು, ವಾರ್ಷಿಕ 499.47 ಟನ್ ಜೇನು ಉತ್ಪಾದನೆ ಆಗುತ್ತಿದೆ.

ಆದ್ದರಿಂದ ಕೊಡಗಿನಲ್ಲಿ ಜೇನು ಕೃಷಿಯನ್ನು ಉತ್ತೇಜನಗೊಳಿಸಲು ಜೇನು ಕೃಷಿಕರು, ವಿಜ್ಞಾನಿಗಳು, ಜೇನು ಕೃಷಿ ಅಧಿಕಾರಿಗಳು ಹಾಗೂ ಜೇನು ಸಹಕಾರ ಸಂಘಗಳು ಮತ್ತು ಜೇನು ಪರಿಕರ ತಯಾರಕರು, ಜೇನು ತುಪ್ಪ ಉತ್ಪಾದನೆಯ ಸಂಸ್ಥೆಯನ್ನು ಒಂದೇ ವೇದಿಕೆಗೆ ಕರೆತಂದು ಕೊಡಗಿನ ಜೇನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ‘ಜೇನು ಹಬ್ಬ-2022’ ವನ್ನು ಆಯೋಜಿಸಲಾಗಿದೆ.

ವಿಜ್ಞಾನಿಗಳು, ಅಧಿಕಾರಿಗಳಿಂದ ಜೇನು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ನೀಡಲಿದ್ದಾರೆ. ಜೇನು ಹಬ್ಬ-2022 ರಲ್ಲಿ ಜೇನು ತುಪ್ಪ ಉತ್ಪಾದನೆ ಮಾಡುವ ರೈತರು, ಜೇನು ಸಹಕಾರ ಸಂಘ, ರೈತ ಉತ್ಪಾದನಾ ಸಂಸ್ಥೆಗಳು ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲೆ ಹಾಗೂ ಕೊಡಗಿನ ನೆರೆಯ ಜಿಲ್ಲೆಯ ರೈತರು, ಸಹಕಾರ ಸಂಘಗಳು ಈ ಜೇನು ಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಮೋದ್ ಅವರು ಮಾಹಿತಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು