ಮಡಿಕೇರಿ: ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.1 ರಂದು ರಾಜ್ಯವ್ಯಾಪಿ ನಡೆಯಲಿರುವ ಪೌರ ಕಾರ್ಮಿಕರ ಪ್ರತಿಭಟನೆಗೆ ಕೊಡಗು ಜಿಲ್ಲಾ ಹೊರಗುತ್ತಿಗೆ ಪೌರ ನೌಕರರ ಸಂಘ ಬೆಂಬಲ ವ್ಯಕ್ತಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಹಾಗೂ ಕಾರ್ಯದರ್ಶಿ ರಮೇಶ್ ಕುಟ್ಟಪ್ಪ, ರಾಜ್ಯ ಸಂಘದ ಕರೆಯ ಮೇರೆಗೆ ಜು.1 ರಿಂದ ಕುಡಿಯುವ ನೀರು ಸರಬರಾಜು, ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಕಸಗುಡಿಸುವವರು, ವಾಹನ ಚಾಲಕರು, ವಾಟರ್ ಮೆನ್, ಡಾಟ ಅಪರೇಟರ್ಗಳು, ತ್ಯಾಜ್ಯ ಸಹಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಗುತ್ತಿಗೆ ಪದ್ಧತಿ ಬದಲು ನೇರ ವೇತನಕ್ಕೆ ಒಳಪಡಿಸುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.