ಮಡಿಕೇರಿ: ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಅಗ್ನಿಪಥ್ ಯೋಜನೆಯನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಗೌಡ ಮಾತನಾಡಿ, ಕೇಂದ್ರ ಸರಕಾರ ಎಂಟು ವರ್ಷಗಳ ಹಿಂದೆ ಘೋಷಿಸಿದಂತೆ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ವಿಫಲವಾಗಿದೆ. ಇದೀಗ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಗ್ನಿಪಥ್ ಯೋಜನೆ ಘೋಷಿಸಿದ್ದು, ಈ ಯೋಜನೆಯಡಿ ಸೇನೆಗೆ ಸೇರುವ ಯುವಕರು ಕೇವಲ 4 ವರ್ಷಗಳ ಸೇವೆ ಸಲ್ಲಿಸಿ ಮತ್ತೆ ಮರಳಬೇಕಾಗುತ್ತದೆ. ಬಳಿಕ ಅವರೆಲ್ಲರಿಗೂ ಉದ್ಯೋಗ ಇಲ್ಲದೆ, ಪಿಂಚಣಿಯೂ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಪಿಸಿದರು.
ಭಾರತೀಯ ಸೇನೆಗೆ ಅಪ್ರತಿಮ ಸೇನಾ ನಾಯಕರನ್ನು, ವೀರಯೋಧರನ್ನು ಕೊಡುಗೆಯಾಗಿ ನೀಡಿರುವ ಕೊಡಗು ತನ್ನದೇ ಆದ ಹಿರಿಮೆ ಹಾಗೂ ಹೆಮ್ಮೆಯನ್ನು ಮುಡಿಗೇರಿಸಿಕೊಂಡಿದೆ. ಪ್ರಸ್ತುತ ದಿನಗಳಲ್ಲು ಇಲ್ಲಿನ ಯುವ ಸಮೂಹ ಅಪಾರ ಸಂಖ್ಯೆಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆ ಜಾರಿಗೆ ತರುವ ಮೂಲಕ ಯುವ ಜನತೆಗೆÉ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ತಕ್ಷಣ ಯೋಜನೆಯನ್ನು ಕೈಬಿಡದಿದ್ದಲ್ಲಿ ಪಕ್ಷದ ವತಿಯಿಂದ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಮ ಮಾತನಾಡಿ, ಯುವಕರಿಗೆ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರುವ ಮೂಲಕ ದೇಶದ ಯುವಕರ ಆಲೋಚನೆಯನ್ನು ಬೇರೆಡೆಗೆ ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಅಗ್ನಿಪಥ್ ಯೋಜನೆಯನ್ನು ಘೋಷಿಸಿದ ಮರುದಿನವೇ ದೇಶದ ಅನೇಕ ಭಾಗಗಳಲ್ಲಿ ಸರಕಾರದÀ ವಿರುದ್ಧ ಪ್ರತಿಭಟನೆಗಳು ನಡೆದಿವೆ, ಆದರೂ ಸರಕಾರ ಎಚ್ಚೆತ್ತುಕೊಂಡಿಲ್ಲ. ಅಗ್ನಿಪಥ್ ಯೋಜನೆಯಿಂದ ಹೊರ ಬರುವ ಶೇ.75 ರಷ್ಟು ಮಂದಿ ಶಿಕ್ಷಣ ಮತ್ತು ಉದ್ಯೋಗವನ್ನು ಕಳೆದುಕೊಳ್ಳಲಿದ್ದು, ನಂತರದ ಭವಿಷ್ಯವನ್ನು ಸರಕಾರ ಸ್ಪಷ್ಟವಾಗಿ ರೂಪಿಸಿಲ್ಲ. ಕೊಡಗಿನ ಯುವ ಸಮೂಹ ಈ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ಯುವ ಮುಖಂಡ ಡಾ.ಮಂಥರ್ ಗೌಡ ಮಾತನಾಡಿ, ಅಗ್ನಿಪಥ್ ಯೋಜನೆ ಯುವಕರಿಗೆ ಉದ್ಯೋಗ ನೀಡುವ ಸ್ಕೀಂ ಅಲ್ಲ, ಬದಲಾಗಿ ಸ್ಕ್ಯಾಮ್ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಯುವಕರ ಕಣ್ಣೊರೆಸುವ ತಂತ್ರ ರೂಪಿಸಲಾಗಿದೆ. ಅಗ್ನಿಪಥ್ ಯೋಜನೆಯಿಂದ ಉದ್ಯೋಗ ಗ್ಯಾರಂಟಿ ಇಲ್ಲ, ನಂತರ ದಿನಗಳಲ್ಲಿ ಕೆಲಸ ಇಲ್ಲ, ಜೊತೆಗೆ ಶಿಕ್ಷಣವೂ ಇಲ್ಲದಂತಾಗುತ್ತದೆ ಎಂದು ಆರೋಪಿಸಿದರು.
ಯೋಜನೆ ವಿರುದ್ಧ ಈಗಾಗಲೇ ವಿವಿಧೆಡೆ ಹೋರಾಟಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮನೆ ಮನೆಗೆ ತೆರಳಿ ಜನರಿಗೆ ಅರಿವು ಮೂಡಿಸಲಾಗುತ್ತದೆ ಎಂದರು.
ಕೆಪಿಸಿಸಿಯ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಎನ್ಎಸ್ಯುಐ ಅಧ್ಯಕ್ಷ ರೋಶನ್ ಗಣಪತಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಕೆ.ಎ.ಯಾಕುಬ್, ವಕ್ತಾರ ತೆನ್ನೀರ ಮೈನಾ, ಸಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಉಪಾಧ್ಯಕ್ಷ ಚಂದ್ರಶೇಖರ್, ಎಸ್.ಸಿ.ಘಟಕದ ಅಧ್ಯಕ್ಷ ಮುದ್ದುರಾಜ್, ಪ್ರಮುಖರಾದ ನೆರವಂಡ ಉಮೇಶ್, ಅಬ್ದುಲ್ ರಜಾಕ್, ಪ್ರಕಾಶ್ ಆಚಾರ್ಯ, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳು, ಎನ್ಎಸ್ಯುಐ ಪದಾಧಿಕಾರಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪತ್ರಿಭಟನೆಯಲ್ಲಿ ಪಾಲ್ಗೊಂಡಿದ್ದರು.