ಮಡಿಕೇರಿ: ಕಳೆದ ನಾಲ್ಕು ವರ್ಷಗಳಿಂದ ಕೊಡಗಿನತ್ತ ತಿರುಗಿ ನೋಡದ ಸಂಸದ ಪ್ರತಾಪ್ ಸಿಂಹ ಅವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೊಡಗಿನ ಬಗ್ಗೆ ಕಾಳಜಿ ತೋರುತ್ತಿರುವುದೇಕೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಶ್ನಿಸಿದೆ.
ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರು ಸಂಸದ ಪ್ರತಾಪ್ ಸಿಂಹರಿಂದ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಮೋದಿ ನಾಮಬಲದಿಂದ ಮಾತ್ರ ಗೆಲುವು ಸಾಧಿಸುತ್ತಿರುವ ಸಂಸದರು ರೈಲು ತರದಿದ್ದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಈಗ ಪ್ರಕೃತಿ ವಿಕೋಪದಲ್ಲಿ ನೊಂದವರಿಗೆ ಏನು ತಂದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಏಳು ತಿಂಗಳ ಅವಧಿಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ವಿರಾಜಪೇಟೆಗೆ ಕುಡಿಯುವ ನೀರು ಪೂರೈಕೆ ಯೋಜನೆಗೆ 52 ಕೋಟಿ, ಪಾದಚಾರಿ ರಸ್ತೆ ನಿರ್ಮಾಣಕ್ಕೆ 5.84 ಕೋಟಿ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಅನುದಾನ ತಂದಿದ್ದಾರೆ. ಸಂಸದ ಪ್ರತಾಪಸಿಂಹ ಅವರ ಕೊಡುಗೆ ಜಿಲ್ಲೆಗೆ ಶೂನ್ಯವೆಂದು ಅವರ ಪಕ್ಷದವರೇ ಹೇಳುತ್ತಾರೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಟಿ.ಪಿ ರಮೇಶ್ , ಕೊಲ್ಯದ ಗಿರೀಶ್, ತೆನ್ನೀರಾ ಮೈನಾ, ಕೆ.ಎಂ. ಲೋಕೇಶ್, ಟಾಟು ಮೊಣ್ಣಪ್ಪ ಉಪಸ್ಥಿತರಿದ್ದರು.