ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾದ ಘಟನೆ ನಡೆದಿದೆ.
ಗೌರಿಶಂಕರ ಎಂಬ ಹೆಸರಿನ ಖಾಸಗಿ ಬಸ್ ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು. ಇಬ್ಬರಿಗೆ ಲಘು ಗಾಯಗಳಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಮೈಸೂರು- ಮಂಗಳೂರು ರಸ್ತೆಯಲ್ಲಿಈ ಘಟನೆ ನಡೆದಿದ್ದು ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ರಸ್ತೆಯ ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿದ್ದವು.
ತಕ್ಷಣ ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಗುಚಿದ್ದ ಬಸ್ಸನ್ನು ಬದಿಗೆ ಸರಿಸಿ ರಸ್ತೆಯ ಒಂದು ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.