ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಕಾರಣ ಸುಮಾರು 1200 ಕ್ಯುಸೆಕ್ ನೀರನ್ನು ಶನಿವಾರ ನದಿಗೆ ಹರಿಯ ಬಿಡಲಾಗಿದ್ದು, ಇದೇ ವೇಳೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಬಾಗಿನ ಅರ್ಪಿಸಿದ್ದಾರೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹಾರಂಗಿ ಜಲಾಶಯ ಬಳಿ ಇರುವ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಬಳಿಕ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್ ಮೂಲಕ ನೀರು ಬಿಡುಗಡೆಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು 2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಜನರು ತುಂಬಾ ನೊಂದಿದ್ದಾರೆ. ಆ ರೀತಿ ಆಗದೆ, ಮಳೆಯೂ ಬರಲಿ ನಾಡಿನ ಜಲಾಶಯಗಳು ತುಂಬುವಂತಾಗಲಿ, ಕೃಷಿ ಚಟುವಟಿಕೆಗಳು ಕೂಡ ಸಮೃದ್ಧಿಯಾಗಲಿ. ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿ ಕರ್ನಾಟಕ, ತಮಿಳುನಾಡು, ಪಾಂಡಿಚೇರಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗೆ ಅನುಕೂಲ ಆಗಲಿ ಎಂದು ಹೇಳಿದರು.
ಕಳೆದ ಬಾರಿ ಜುಲೈ 16 ರಂದು ಜಲಾಶಯದಿಂದ ನೀರನ್ನು ನದಿಗೆ ಹರಿಯ ಬಿಡಲಾಗಿತ್ತು. ಈ ಬಾರಿ ಜಲಾಶಯ ತುಂಬಲು ಇನ್ನೂ 3 ಅಡಿ ಬಾಕಿ ಇರುವಾಗಲೇ ನದಿಗೆ ಜಲಾಶಯ ನೀರನ್ನು ಹರಿಯ ಬಿಡಲಾಗಿದೆ. ಇದರಿಂದ ಯಾರಿಗೂ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಗಮನ ಹರಿಸಲಾಗಿದೆ ಎಂದರು.