ಮಡಿಕೇರಿ, ಏ.16: ವಿಧಾನಸಭಾ ಚುನಾವಣೆ ಸಂಬಂಧ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ವ್ಯವಸ್ಥಿತವಾಗಿ ಚುನಾವಣಾ ಕಾರ್ಯ ನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಸಂತ ಜೋಸೆಫರ ಕಾಲೇಜಿನಲ್ಲಿ ಪಿಆರ್ ಒ ಮತ್ತು ಎಪಿಆರ್ಗಳಿಗೆ ಭಾನುವಾರ ನಡೆದ ಚುನಾವಣಾ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿ ಅವರು ಮಾತನಾಡಿದರು.
ಚುನಾವಣಾ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು. ಯಾವುದೇ ರೀತಿಯ ಆತಂಕ ಅಥವಾ ಭಯ ಪಡಬಾರದು, ಚುನಾವಣಾ ಆಯೋಗದ ನಿರ್ದೇಶನದಂತೆ ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಮತ್ತಿತರ ಬಗ್ಗೆ ಮಾಹಿತಿ ಪಡೆದು ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಮತಗಟ್ಟೆಗಳಿಗೆ ನಿಯೋಜಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಲಾಗುತ್ತಿದೆ ಎಂದರು.
ಚುನಾವಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳಿಗೆ ಅಂಚೆ ಮತದಾನಕ್ಕೆ ಅವಕಾಶವಿದ್ದು, ನಮೂನೆಯನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ಚುನಾವಣೆ ಸಂಬಂಧ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಗಾರದಲ್ಲಿ ಪಿಆರ್ಒ, ಎಪಿಆರ್ ಒ ಹಾಗೂ ಸೆಕ್ಟರ್ ಅಧಿಕಾರಿಗಳಿಂದ ಹಲವು ಮಾಹಿತಿ ಪಡೆದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಮಾತನಾಡಿ ವಿಧಾನಸಭಾ ಚುನಾವಣೆಗೆ ನಿಯೋಜನೆ ಆಗಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ತಮ್ಮ ಜವಬ್ದಾರಿಯನ್ನು ತಿಳಿದು ಕರ್ತವ್ಯ ನಿರ್ವಹಿಸಬೇಕು. ಸಂಶಯ ಇದ್ದಲ್ಲಿ ಸೆಕ್ಟರ್ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.
‘ಮಾಸ್ಟರ್ ತರಬೇತಿದಾರರಾದ ಕೆ.ಜೆ.ದಿವಾಕರ ಅವರು ಚುನಾವಣಾ ಕರ್ತವ್ಯ ಎಂದರೆ ಕೆಲವರು ಹಿಂಜರಿಕೆ ಪಡುತ್ತಾರೆ. ಆದರೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ಕರ್ತವ್ಯವನ್ನು ಹಬ್ಬದ ರೀತಿ ಶ್ರದ್ಧೆಯಿಂದ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.’
ಚುನಾವಣಾ ಆಯೋಗ ನೀಡಿರುವ ಮರ್ಗಸೂಚಿಗಳನ್ನು ಸರಿಯಾಗಿ ಅರ್ಥಮಾಡಿಕೊಂಡರೆ ಯಾವುದೇ ಗೊಂದಲಗಳಿಗೆ ಅವಕಾಶ ಆಗುವುದಿಲ್ಲ, ಆ ನಿಟ್ಟಿನಲ್ಲಿ ಆತ್ಮವಿಶ್ವಾಸ ಇರಬೇಕು, ಆದರೆ ಅತಿಯಾದ ಆತ್ಮವಿಶ್ವಾಸವೂ ಬೇಡ ಎಂದು ದಿವಾಕರ ಅವರು ನುಡಿದರು.’
ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ, ಅಣಕು ಮತದಾನ ಮತ್ತಿತರ ಸಂಬಂಧ ಮತಗಟ್ಟೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಚುನಾವಣಾ ಪಾವಿತ್ರ್ಯತೆ ಕಾಪಾಡಬೇಕು ಎಂದು ಕೆ.ಜೆ.ದಿವಾಕರ ಅವರು ಹೇಳಿದರು.
‘ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ, ಎರಡನೇ ಮತಗಟ್ಟೆ ಅಧಿಕಾರಿ ಮತ್ತು ಮೂರನೇ ಮತಗಟ್ಟೆ ಅಧಿಕಾರಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.’
ಮಸ್ಟರಿಂಗ್, ಮತದಾನದಂದು ಮತ್ತು ಮತದಾನ ಪೂರ್ಣಗೊಂಡ ನಂತರ ಡಿಮಸ್ಟರಿಂಗ್ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಮತ್ತೊಬ್ಬ ಮಾಸ್ಟರ್ ತರಬೇತಿದಾರರಾದ ಕೆ.ಸಿ.ದಯಾನಂದ ಅವರು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ, ಏಜೆಂಟ್ ಅವರು ಚುನಾವಣೆ ಸಂಬಂಧ ಆಯೋಗದ ನಿರ್ದೇಶನ ಪಾಲಿಸಬೇಕು ಎಂದರು.
ಮತಗಟ್ಟೆ ಅಧಿಕಾರಿಗಳು ಅಣಕು ಮತದಾನ, ಪ್ರಮಾಣ ಪತ್ರ ಬರೆಯುವುದು, ಇವಿಎಂ, ಕಂಟ್ರೊಲ್ ಯುನಿಟ್, ಬ್ಯಾಲೆಟ್ ಯುನಿಟ್ ಹಾಗೂ ವಿವಿಪ್ಯಾಟ್ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರಬೇಕು. ಮತದಾನದ ಗೌಪ್ಯತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.
ತಹಶೀಲ್ದಾರರಾದ ಕಿರಣ್ ಜಿ.ಗೌರಯ್ಯ, ಎಸ್.ಎನ್.ನರಗುಂದ, ಟಿ.ಎಂ.ಪ್ರಕಾಶ್, ಚುನಾವಣಾ ತಹಶೀಲ್ದಾರ್ ರವಿಕುಮಾರ್, ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಸೆಕ್ಟರ್ ಅಧಿಕಾರಿಗಳು, ಪಿಆರ್ ಒ, ಎಪಿಆರ್ ಒ, ಇತರರು ಇದ್ದರು.