ಮಂಡ್ಯ: ಕಳೆದ ಒಂದು ವಾರದಿಂದ ಮಳೆ ಸುರಿದ ಪರಿಣಾಮ ಮದ್ದೂರು ತಾಲೂಕಿನ ಮೆಣಸಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಬಿದ್ದಿದ್ದು ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದಾಗಿ ಹಲವು ಮನೆಗಳು ಕುಸಿದು ಬಿದ್ದಿದ್ದು, ಇದೀಗ ಮೆಣಸಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಬಿದ್ದಿರುವುದು ಆತಂಕ ತಂದಿದೆ. ಈ ಶಾಲಾ ಈ ಹಿಂದೆಯೇ ಶಿಥಿಲಗೊಂಡಿತ್ತು. ಸಂಬಂಧಿಸಿದವರು ಇತ್ತ ಗಮನಹರಿಸಿ ದುರಸ್ತಿಗೊಳಿಸಿದ್ದರೆ ಯಾವುದೇ ತೊಂದರೆಯಾಗುತ್ತಿರಲಿಲ್ಲ. ಆದರೆ ಇದೀಗ ಸುರಿದ ಮಳೆಯಿಂದ ಶಿಥಿಲಗೊಂಡಿದ್ದ ಕಟ್ಟಡ ಮೇಲ್ಚಾವಣಿ ಕುಸಿದಿದ್ದು ಮಕ್ಕಳು ಶಾಲೆಗೆ ಬರಲು ಭಯ ಪಡುವಂತಾಗಿದೆ.
ಶಾಲಾ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಅನೇಕ ಬಾರಿ ಗ್ರಾಮದ ಹಿರಿಯರು ಹಾಗೂ ಮುಖಂಡರು ತಾಲೂಕಿನ ಜನಪ್ರತಿನಿಧಿಗಳು ಹಾಗೂ ಬಿಇಓಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಇದೀಗ ಛಾವಣಿ ಕುಸಿಯುವಂತಾಗಿದೆ. ಈಗಾಗಲೇ ಈ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿಯುತ್ತಿವೆ. ಮಳೆ, ಗಾಳಿಯ ಅಬ್ಬರಕ್ಕೆ ತಾಲೂಕಿನ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹೀಗಿರುವಾಗ ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳು ಯಾವಾಗ ಕುಸಿಯುತ್ತವೆಯೋ ಎಂಬ ಭಯ ಶುರುವಾಗಿದೆ.
ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ದುರಸ್ತಿಪಡಿಸಬೇಕಾಗಿದೆ. ಇಲ್ಲದೆ ಹೋದರೆ ದುರಂತಗಳು ಸಂಭವಿಸುವ ಸಾಧ್ಯತೆಗಳು ಇವೆ ಎಂದು ಸಾರ್ವಜನಿಕರು ಹೇಳಿದ್ದಾರೆ.