ಮಂಡ್ಯ: ಕೋವಿಡ್ ರೂಪಾಂತರಿ ತಳಿ ಓಮೈಕ್ರಾನ್ ಎಲ್ಲೆಡೆ ವೇಗವಾಗಿ ಹರಡುತ್ತಿರುವ ಕಾರಣ ಎಲ್ಕೆಜಿಯಿಂದ 7ನೇ ತರಗತಿವರೆಗೆ ಜ.17ರಿಂದ ಜ.22ರವರೆಗೆ ಶಾಲೆಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಶುಕ್ರವಾರ ಆದೇಶಿಸಿದ್ದಾರೆ.
ಶಾಲೆಗಳಿಗೂ ಕೋವಿಡ್ ವ್ಯಾಪ್ತಿಸಿದ್ದು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಮಕ್ಕಳು ಸೋಂಕಿನಿಂದ ನರಳುತ್ತಿದ್ದಾರೆ. ವಿಶೇಷವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲೇ ಹೆಚ್ಚು ಮಕ್ಕಳು ಕೋವಿಡ್ ತುತ್ತಾಗುತ್ತಿದ್ದಾರೆ. ಶಾಲೆಗಳಿಗೆ ರಜೆ ಘೋಷಣೆ ಮಾಡುವ ಅಧಿಕಾರವನ್ನು ಸರ್ಕಾರ ಜಿಲ್ಲಾಧಿಕಾರಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪೂರ್ವ ಪ್ರಾಥಮಿಕ, ಅಂಗನವಾಡಿ, ಹಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲೆ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ, ಪ್ರೌಢಶಾಲೆ, ಕಾಲೇಜುಗಳು ಎಂದಿನಂತೆ ನಡೆಯಲಿವೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ಪ್ರಕರಣಗಳು ಅಪಾಯ ಸನ್ನಿವೇಶ ಸೃಷ್ಟಿಸಿದರೆ ಪ್ರೌಢಶಾಲೆ, ಕಾಲೇಜುಗಳನ್ನೂ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.