ಕೆ.ಆರ್.ಪೇಟೆ: ಶಾಲಾ ಪ್ರಾರಂಭದ ದಿನವೇ ಶಿಕ್ಷಕನೊಬ್ಬ ಮೂರನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಪೊಲೀಸರ ಅತಿಥಿಯಾಗಿರುವ ಘಟನೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಗಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಎಸ್.ಕೆ.ಚಂದ್ರಶೇಖರ್ ಎಂಬ ಶಿಕ್ಷಕ ಕಳೆದ ಮಾರ್ಚ್ 31ರಂದು ಮೂರನೇ ತರಗತಿಯ ವಿದ್ಯಾರ್ಥಿನಿಯನ್ನು ಶೌಚಾಲಯದ ಒಳಗೆ ಕರೆದುಕೊಂಡು ಹೋಗಿ ಕೈ ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಲ್ಲದೇ ಶಾಲಾ ಪ್ರಾರಂಭೋತ್ಸವದ ದಿನವೇ ತನ್ನ ಚೇಷ್ಟೆಯನ್ನು ಮಾಡಿದ್ದು ಯಾರಿಗೂ ಹೇಳದಂತೆ ಹೆದರಿಸಿದ್ದಾನೆ. ಮಕ್ಕಳ ಮೂಲಕ ವಿಷಯ ತಿಳಿದಿದ್ದರಿಂದ ಸ್ಥಳೀಯರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದು ಅವರು ಸ್ಥಳಕ್ಕೆ ಆಗಮಿಸಿದ ವೇಳೆ ಗ್ರಾಮಸ್ಥರು ಹಾಗೂ ಪೋಷಕರು ಮುತ್ತಿಗೆ ಹಾಕಿ ಶಿಕ್ಷಕನನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು ಅವರು ಶಿಕ್ಷಕ ಎಸ್.ಕೆ.ಚಂದ್ರಶೇಖರ್ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.