ಮಂಡ್ಯ : ಮುಂಬರುವ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಪಪಡಿಸಿದರು.
ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಬುಧವಾರ ಅಂಬಿ ಟೀಮ್ ವತಿಯಿಂದ ಹಮ್ಮಿಕೊಂಡಿದ್ದ.ಚಿತ್ರ ನಟ ದಿ.ಅಂಬರೀಷ್ ಅವರ 3 ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಅಂಬರೀಶ್ ಅವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾಗ ಕಾಂಗ್ರೆಸ್, ಬಿಜೆಪಿ, ರೈತ ಸಂಘದ ಸೇರಿದಂತೆ ಎಲ್ಲಾ ಪಕ್ಷಗಳು ನನಗೆ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದರು.
ಚುನಾವಣೆಗೆ ನಿಂತಿರುವ ಕೆಲವು ಅಭ್ಯರ್ಥಿಗಳು ದೂರವಾಣಿ ಕರೆ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಅವರಿಗೆ ಶುಭಾಶಯ ಹೇಳಿದ್ದೇನೆ ಹೊರತು ಯಾರಿಗೂ ಬೆಂಬಲ ನೀಡುತ್ತೇನೆ ಎಂದು ಭರವಸೆ ನೀಡಿಲ್ಲ ಎಂದರು.
ಅಂಬರೀಷ್ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲೆಯಲ್ಲಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದರು.
ಅಂಬರೀಶ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ, ಪದ್ಮಶ್ರಿ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಸರ್ಕಾರ ನೀಡಬೇಕು ಎಂಬ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಿರುವ ವಿಷಯವಾಗಿ ಪ್ರತಿಕ್ರಿಯಿಸಿ ಅಂಬರೀಷ್ ಅವರಿಗೆ ಅಭಿಮಾನಿಗಳು ನೀಡಿರುವ ಪ್ರೀತಿಯೇ ದೊಡ್ದ ಪ್ರಶಸ್ತಿಯಾಗಿದ್ದು, ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸಂದರ್ಭ ಬಂದಾಗ ಎಲ್ಲಾ ಪ್ರಶಸ್ತಿಗಳು ಸಿಗುತ್ತದೆ ಈ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಅಭಿಮಾನಿಗಳಿಗೆ ಕಿವಿಮಾತು ಹೇಳಿದರು.
ಇದೇ ವೇಳೆ ಚಿತ್ರನಟರಾದ ದೊಡ್ಡಣ್ಣ, ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮದ್ದೂರು ತಾಲೂಕು ಅಂಬರೀಷ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಹೊಟ್ಟೆಗೌಡನದೊಡ್ಡಿ ನಾಗೇಶ್, ಪದಾಧಿಕಾರಿಗಳಾದ ಲೋಕೇಶ್, ಆನಂದ್, ಸಂತೋಷ್, ನಂದೀಶ್, ಗಿರೀಶ್, ಷಮಿ ಇತರರು ಇದ್ದರು.