ಭಾರತೀನಗರ: ಮಾಜಿ ಸಿ.ಎಂ.ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಪಂಚರತ್ನ ಯೋಜನೆ ರೈತರಿಗೆ ನೆರವಾಗಲಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ಅವರು ತಿಳಿಸಿದರು.
ಇಲ್ಲಿಗೆ ಸಮೀಪದ ಅಂಬರಹಳ್ಳಿ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರಷ್ಟೇ ರೈತ ಸಮುದಾಯಕ್ಕೆ ಉಳಿಗಾಲವಿದ್ದು ಇದನ್ನರಿತು ಎಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಿ ಮತ್ತೊಮ್ಮೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ನಾನು ಈ ಸಂಪರ್ಕ ಸಭೆಗೆ ಬಂದಿರುವುದು ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ನನಗೆ ಮತ ಕೊಡಿ ಎಂಬ ಅರ್ಥವಲ್ಲ, ಮತ್ತೊಮ್ಮೆ ದೇವೇಗೌಡರ ನೇತೃತ್ವದಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರೆ ಸಮಗ್ರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾರೆ. ಇದನ್ನು ಅರ್ಥ ಮಾಡಿಕೊಂಡು ಜೆಡಿಎಸ್ ಪಕ್ಷದ ಗೆಲುವಿಗೆ ತಾವೆಲ್ಲ ಸಹಕಾರ ನೀಡಬೇಕು ಎಂದರು.
ಜನರ ಸಮಸ್ಯೆಗಳನ್ನು ಆಲಿಸಲೆಂದೇ ನಾನು ಜನ ಸಂಪರ್ಕ ಸಭೆಯನ್ನು ನಡೆಸುತ್ತಿದ್ದೇನೆ. ನಿಮ್ಮ ಯಾವುದೇ ಸಮಸ್ಯೆ ಇದ್ದರೂ ನನಗೆ ಕೂಡಲೇ ತಿಳಿಸಿದರೆ ಸಮಸ್ಯೆಯನ್ನು ಬಗೆಹರಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಗ್ರಾಮಸ್ಥರು ಶಾಸಕರಿಗೆ ಸಾರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಸ್ಥಳದಲ್ಲೇ ಶಾಸಕರು ಸಾರಿಗೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಗ್ರಾಮಕ್ಕೆ ಸಾರಿಗೆ ಬಸ್ಸುಗಳನ್ನು ಕಲ್ಪಿಸುವಂತೆ ತಾಕೀತು ಮಾಡಿದರು. ಇದಕ್ಕೂ ಮುನ್ನ ಶಾಸಕ ಡಿ.ಸಿ.ತಮ್ಮಣ್ಣ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು.
ಇದೇ ವೇಳೆ ಮಾದನಾಯಕನಹಳ್ಳಿ ರಾಜಣ್ಣ, ಮರಿಮಾದೇಗೌಡ, ಚಿಕ್ಕತಿಮ್ಮೇಗೌಡ ಮನೋಹರ್, ಆಸರೆ ಸೇವಾಟ್ರಸ್ಟ್ ಅಧ್ಯಕ್ಷ ರಘು, ಚಿಕ್ಕಹೈದೇಗೌಡ, ಅಭಿರಾಜ್, ರವಿಗೌಡ, ರಾಮಲಕ್ಷ್ಮಣ, ಯೋಗೇಶ್ ಸೇರಿದಂತೆ ಇತರರಿದ್ದರು.