ಮದ್ದೂರು: ಈಗ ವಿಧಾನಸಭಾ ಚುನಾವಣೆ ನಡೆದರೆ ಬಿಜೆಪಿ 135 ಸ್ಥಾನ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.
ತಾಲೂಕಿನ ಚಿಕ್ಕರಸಿನಕೆರೆ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾಗ ರಾಜ್ಯದ ಎಲ್ಲ ಕ್ಷೇತ್ರದಾದ್ಯಂತ ಸಂಚಾರ ನಡೆಸಿದ್ದರೂ ಸಹ ಚುನಾವಣೆಯಲ್ಲಿ 113 ಸ್ಥಾನ ಗೆಲ್ಲಲು ಸಾಧ್ಯವಾಯಿತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ 113 ಸ್ಥಾನಕ್ಕಿಂತ ಕೆಳಗೆ ಹೋದರೂ ಆಚ್ಚರಿಪಡಬೇಕಾಗಿಲ್ಲ ಎಂದರು.
ಈಗ ಚುನಾವಣೆ ನಡೆದರೆ ಬಿಜೆಪಿ ಬಹುಮತ ಸಾಧಿಸಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಯಡಿಯೂರಪ್ಪ ಬಾಯಿ ಚಪಲಕ್ಕೆ ಮಾತನಾಡುವುದನ್ನು ಬಿಟ್ಟು ವಾಸ್ತವ ಅರಿತು ಅವರು ಮಾತನಾಡಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಮನಸ್ಸನ್ನು ಗೆದ್ದಿದೆ. ಇದನ್ನು ಸಹಿಸಲಾರದ ಯಡಿಯೂರಪ್ಪ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದರು.