ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕಾರ ಎಲ್ಲಾ ಗ್ರಾಮ ಪಂಚಾಯಿತಗಳು ಹೊಸದಾಗಿ ರಚನೆಯಾದ ಬಳಿಕ ಮುಂದಿನ 5 ವರ್ಷಗಳಿಗೆ ದೂರದೃಷ್ಟಿ ಯೋಜನೆಯನ್ನು ಸಿದ್ದಪಡಿಸಬೇಕಿದೆ. ಇದಕ್ಕಾಗಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಎಲ್ಲರೂ ತರಬೇತಿ ಪಡೆಯುವ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸಾಧಿಸಬೇಕಾಗಿರುವ ಗುರಿಗಳನ್ನು ನಿಗದಿಪಡಿಸಿ, ಅವುಗಳನ್ನು ಸಮುದಾಯದ ಭಾಗವಹಿಸುವಿಕೆಯೊಂದಿಗೆ ಕಾರ್ಯರೂಪಕ್ಕೆ ತರುವ ಕಾರ್ಯಕ್ರಮವೇ ದೂರದೃಷ್ಟಿ ಯೋಜನೆ ಎಂದರು.
ಇದೊಂದು ಬಹಳ ಉಪಯುಕ್ತ ಕಾರ್ಯಕ್ರಮವಾಗಿದ್ದು, ಇದನ್ನು ಕಾರ್ಯರೂಪಕ್ಕೆ ತರುವುದು ನಮ್ಮ ಕೈಯಲ್ಲಿಯೇ ಇರುತ್ತದೆ. ಗ್ರಾಮಗಳ ಅಭಿವೃದ್ಧಿಗೆ ಏನು ಮಾಡಬೇಕು ಎಂದು ಪಟ್ಟಿ ಮಾಡಿಕೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿ ಎಂದರಲ್ಲದೆ, ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಜನಪ್ರತಿನಿಧಿಗಳು ಗ್ರಾಮಸಭೆ ಮಾಡಿ, ಯಾವುದಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬ ಬಗ್ಗೆ ಚರ್ಚೆ ಮಾಡಿ ಕಾರ್ಯಕ್ರಮ ರೂಪಿಸುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಿ ಎಂದು ಕಿವಿಮಾತು ಹೇಳಿದರು.
ಜಿಪಂ ಸಿಇಓ ಶಾಂತಾ ಎಲ್.ಹುಲ್ಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಭಾಗದ ಸಮಸ್ಯೆಗಳನ್ನು ನಿವಾರಿಸುವ ಸಲುವಾಗಿ ದೂರದೃಷ್ಟಿ ಯೋಜನೆ ಜಾರಿಗೆ ಬಂದಿದೆ. ಈಗಾಗಲೇ ಜನಪ್ರತಿನಿಧಿಗಳು ಹಾಗೂ ಪಿಡಿಓಗಳಿಗೆ ತರಬೇತಿ ನೀಡಲಾಗಿದೆ. ಆರೋಗ್ಯ, ಶಿಕ್ಷಣ, ಬಡತನ, ಜೀವನೋಪಾಯ ನಿರ್ವಹಣೆ ಸೇರಿದಂತೆ 8 ವಲಯಗಳ 10 ಹಂತಗಳಲ್ಲಿ ಗ್ರಾಮಗಳ ಸಮಸ್ಯೆ ಗುರುತಿಸಿ ಸಮಸ್ಯೆಗಳ ಆಧಾರದ ಮೇಲೆ ಗುರಿ ನಿಗದಿಪಡಿಸಿಕೊಂಡು, ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಮೂಲಕ ಕಾರ್ಯರೂಪಕ್ಕೆ ತರಬೇಕು ಎಂದರು.
ಗ್ರಾಮ ಸಭೆ ಅನುಮೋದಿತ ದೂರದೃಷ್ಟಿ ಯೋಜನೆಯನ್ನು ಪ್ರತಿ ಗ್ರಾಮ ಪಂಚಾಯಿತಿಗೆ ಕಳುಹಿಸಿಕೊಡಬೇಕು. ಅನುಮೋದಿತ ದೂರದೃಷ್ಟಿ ಯೋಜನೆಯನ್ನು ಸರ್ಕಾರವು ನಿಗದಿ ಪಡಿಸಿರುವ ಪಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸಬೇಕು ಎಂದರು.
ಪ್ರತಿ 5 ಗ್ರಾಮ ಪಂಚಾಯಿತಿಗಳಿಗೆ ತಲಾ ಒಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಈಗಾಗಲೇ ಸಂಬಂಧಪಟ್ಟ ಬಹುತೇಕ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ವಲಯವಾರು ಸಮಸ್ಯೆಗಳನ್ನು ಅರಿಯಲು ಕೇಂದ್ರೀಕೃತ ಗುಂಪು ಚರ್ಚೆಗಳನ್ನು ಕೈಗೊಳ್ಳಬೇಕು. ಇಲಾಖಾ ಅಧಿಕಾರಿಗಳು, ಚುನಾಯಿತ ಸದಸ್ಯರು, ಸಂಬAಧಪಟ್ಟ ಉಪ ಸಮಿತಿಗಳ ಸದಸ್ಯರು, ವಿಷಯ ತಜ್ಞರು, ಸಂಬಂಧಿತ ವಿಷಯಾಧಾರಿತ ಸಿಬ್ಬಂದಿಗಳು, ಸ್ವ-ಸಹಾಯ ಸಂಘಗಳ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಬೇಕು. ಈ ಮೂಲಕ ದೂರದೃಷ್ಟಿ ಯೋಜನಾ ತಯಾರಿಕಾ ಪ್ರಕ್ರಿಯೆಗೆ ಪೂರಕ ವಾತಾವರಣವನ್ನು ನಿರ್ಮಿಸಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲ ಕೃಷ್ಣ, ಜಿಪಂ ಉಪ ಕಾರ್ಯದರ್ಶಿ (ಆಡಳಿತ) ಸರಸ್ವತಿ, ಯೋಜನಾ, ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಪವನ್ ಕುಮಾರ್ ಹಾಜರಿದ್ದರು.