ಮಂಡ್ಯ: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರುಗಳು ಭಾಗವಹಿಸಲಿದ್ದು, ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಮನವಿ ಮಾಡಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದ ಪ್ರಚಾರ ವಾಹನ ಚಾಲನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾರ್ಯಕ್ರಮಕ್ಕೆ ನಾನಾ ಭಾಗಗಳಿಂದ ಸಾಧು, ಸಂತರು, ಭಾಗವಹಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಸಚಿವ ಡಾ.ನಾರಾಯಣಗೌಡ ಮಾತನಾಡಿ ಮಹಾಕುಂಭಮೇಳವನ್ನು ಜಗದ್ಗುರಗಳ ಸೂಚನೆಯಂತೆ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ಮಹಾಕುಂಭಮೇಳ ನಡೆಯುತ್ತಿರುವುದು ನಮ್ಮೆಲ್ಲರ ಪುಣ್ಯ. 9 ವರ್ಷಗಳ ಹಿಂದೆ ಅದ್ಭುತವಾಗಿ ನಡೆದಿತ್ತು. ಇದೀಗ ಮತ್ತೆ ಜಗದ್ಗುರುಗಳ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸೋಣ. ಇದು ಕೆಆರ್ ಪೇಟೆಗೆ ಮಾತ್ರವಲ್ಲ, ಸುತ್ತಮುತ್ತಲಿನ ನಾಲ್ಕೈದು ಜಿಲ್ಲೆಗಳಿಗೆ ಹೆಮ್ಮೆಯ ಕಾರ್ಯಕ್ರಮವಾಗಿದೆ ಎಂದರು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, 9 ವರ್ಷಗಳ ಹಿಂದೆ ಯಾವುದೇ ಪೂರ್ವ ಸಿದ್ದತೆಗಳಿಲ್ಲದೇ, ದಿಢೀರ್ ಆಗಿ ರೂಪುಗೊಂಡು ಯಶಸ್ವಿಯಾಗಿ ಕುಂಭಮೇಳ ನಡೆದಿತ್ತು. ಆಗ ಸಂಪೂರ್ಣ ಜವಾಬ್ದಾರಿಯನ್ನ ತೆಗೆದುಕೊಂಡಿದ್ದ ನಾರಾಯಣಗೌಡರು ಯಶಸ್ವಿಗೊಳಿಸಿದ್ದರು. ಈಗ ಸಚಿವರಾಗಿ ಮತ್ತೊಮ್ಮೆ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದು, ಉತ್ತಮವಾಗಿ ರೂಪಿಸುತ್ತಿದ್ದಾರೆ ಎಂದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಕುಂಭಮೇಳಕ್ಕೆ ಸರ್ಕಾರ, ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗ್ತಿದೆ. ನದಿ ನೀರಿಗೆ, ಗಾಳಿಗೆ ಯಾವುದೇ ಜಾತಿ ಇಲ್ಲ. ಜಾತಿಬೇಧ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಸೇರಿ ಇದನ್ನು ಯಶಸ್ವಿಗೊಳಿಸಬೇಕು ಎಂದರು,
ಜಿಲ್ಲಾಧಿಕಾರಿ ಎಸ್.ಅಶ್ವತಿ,ಕಾಗಿನೆಲೆ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ಎಂಎಲ್ಸಿ ಕೇಶವ ಪ್ರಸಾದ್, ಮಾಜಿ ಎಂಎಲ್ಸಿ ಮಾದೇಗೌಡ, ಎಸ್ಪಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರ ಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾಕುಂಭಮೇಳ ಕಾರ್ಯಕ್ರಮದ ಹಿನ್ನಲೆ ಪ್ರಚಾರ ವಾಹನ ಹಾಗೂ ದಾನಿಗಳ ಕೊಡುಗೆ ಸ್ವೀಕಾರ ವಾಹನಕ್ಕೆ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು, ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಕಾಗಿನೆಲೆ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳು ಹಾಗೂ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ,ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರುಗಳು ಚಾಲನೆ ನೀಡಿದರು.