ಮಂಡ್ಯ, ಡಿ.16: ಮದ್ದೂರು ಬ್ರ್ಯಾಂಚ್ ಕಾಲುವೆಯ ಕೊನೆಯ ಹಳ್ಳಿಗೆ ಕಾವೇರಿ ನೀರು ತಲುಪುತ್ತಿಲ್ಲ. ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಕಾಲುವೆಯ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮದ್ದೂರಿನಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಮಂಡ್ಯದ ಇತಿಹಾಸವನ್ನು ಅವಲೋಕಿಸಿದಾಗ, ಕೇವಲ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದಿದೆ. ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಮುಚ್ಚಿಸಿದ್ದರಿಂದ, ಮಂಡ್ಯದ ರೈತರು ಕಬ್ಬುಬೆಳೆಯನ್ನು ಮೈಸೂರಿಗೆ ತೆಗೆದುಕೊಂಡು ಹೋಗುವ ಪರಿಸ್ಥಿತಿಯಿತ್ತು. ಹಿಂದಿನ ಸರ್ಕಾರಗಳು ರೈತರ ಸಂಕಷ್ಟವನ್ನು ಇಮ್ಮಡಿಗೊಳಿಸಿದರು. ನಾನು ಮುಖ್ಯಮಂತ್ರಿಯಾದ ನಂತರ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಿ, ಮಂಡ್ಯದ ರೈತರು ಕಬ್ಬನ್ನು ಇಲ್ಲಿಯೇ ಅರೆಸುವ ವ್ಯವಸ್ಥೆಯನ್ನು ಕಲ್ಪಿಸಿದ್ದೇನೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಅಧಿಕಾರ ಹೊಂದಿದ್ದ ಪಕ್ಷಗಳು, ಅಲ್ಲಿನ ಜನರ ಸಂಕಷ್ಟಕ್ಕೆ ಪರಿಹಾರ ನೀಡಲಿಲ್ಲ. ಮಂಡ್ಯದ ಜನರನ್ನು ಭಾವನಾತ್ಮಕವಾಗಿ ಸೆಳೆದು , ಮತವನ್ನು ಪಡೆಯಲು ಇನ್ನು ಮುಂದೆ ಸಾಧ್ಯವಿಲ್ಲ. ಆದರೆ ಭಾಜಪ ಸರ್ಕಾರ ರೈತರ ಶ್ರಮಕ್ಕೆ ಬೆಲೆ ನೀಡಿದೆ. ಮಂಡ್ಯ ಜಿಲ್ಲೆಯ ಜನರ ಆಶೋತ್ತರಗಳನ್ನು ಸಾಕಾರಗೊಳಿಸುವ ಸರ್ಕಾರ ನಮ್ಮದಾಗಿದೆ. ಕೆಆರ್ ಎಸ್ ಜಲಾಶಯಕ್ಕೆ 16 ಹೊಸ ಕ್ರೆಸ್ಟ್ ಗೇಟ್ ಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಹೊಸ ಗೇಟ್ ಗಳನ್ನು ಅಳವಡಿಸಲಾಗುವುದು. ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ 330 ಕೋಟಿ ರೂ. ವೆಚ್ಚದಲ್ಲಿ ಮಂಡ್ಯದ ಕಾಲುವೆಗಳ ಆಧುನೀಕರಣವನ್ನು ಮಾಡಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ ಮತ್ತಿತರು ಉಪಸ್ಥಿತರಿದ್ದರು.