ಕೆ.ಆರ್.ಪೇಟೆ: ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಎಸ್.ಎಂ.ಲಿಂಗಪ್ಪ ಸಹಕಾರ ಭವನದ ಆವರಣದಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಮೈತ್ರಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯ ಸೇರಿದಂತೆ ಇಡೀ ಭರತ ಖಂಡದಲ್ಲಿ ಇಂದು ಬಿಜೆಪಿ ಪರವಾದ ಅಲೆಯು ಬೀಸುತ್ತಿರುವ ಹಿನ್ನೆಲೆಯಲ್ಲಿ ನಮ್ಮ ದೇಶದ ಪ್ರಧಾನಿಗಳಾಗಿ ಮತ್ತೊಮ್ಮೆ ವಿಶ್ವನಾಯಕ ನರೇಂದ್ರಮೋದಿ ಅವರು ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧಿಸಿರುವುದು ನಮ್ಮೆಲ್ಲರ ಪುಣ್ಯ. ಜಿಲ್ಲೆಯ ರೈತಾಪಿವರ್ಗ ಹಾಗೂ ಜನತೆಯ ಸ್ವಾಭಿಮಾನವನ್ನು ಎತ್ತಿಹಿಡಿಯಲು ಸ್ವತಃ ಕುಮಾರಣ್ಣ ಅವರೇ ಅಭಿಮಾನಿಗಳ ಒತ್ತಾಯಕ್ಕೆ ಕಟ್ಟುಬಿದ್ದು ಮಂಡ್ಯ ಲೋಕಸಭ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಮಂಡ್ಯ ಚುನಾವಣೆಯು ಇಡೀ ದೇಶದ ಗಮನ ಸೆಳೆದಿದೆ ಎಂದರು.
ರಾಜ್ಯ ಯುವ ಜೆಡಿಎಸ್ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರ ಒತ್ತಾಯಕ್ಕೆ ಕಟ್ಟುಬಿದ್ದು ತಮ್ಮ ಅನಾರೋಗ್ಯವನ್ನು ಲೆಕ್ಕಿಸದೇ ಕುಮಾರಣ್ಣ ಅವರು ಜಿಲ್ಲೆಯ ಜನತೆಯ ಸ್ವಾಭಿಮಾನವನ್ನು ಎತ್ತಿಹಿಡಿಯಲು ಮಂಡ್ಯ ಲೋಕಸಭಾ ಅಖಾಡಕ್ಕೆ ಧುಮುಕಿದ್ದಾರೆ. ಜಿಲ್ಲೆಯ ಪ್ರಜ್ಞಾವಂತ ಮತದಾರ ಬಂಧುಗಳು ಹಾಗೂ ಅಭಿಮಾನಿಗಳು ನನ್ನ ಸೋಲಿನ ಕಹಿಯನ್ನು ಮರೆಸಲು ಕುಮಾರಣ್ಣ ಅವರನ್ನು ಭಾರೀ ಬಹುಮತಗಳ ಅಂತರದಿಂದ ಗೆಲ್ಲಿಸುವ ತೀರ್ಮಾನ ಮಾಡಿದ್ದಾರೆ ಎಂದರು.
ಮಂಡ್ಯ ಜಿಲ್ಲೆಯ ಜನರ ಭಾವನೆಗಳ ನಡುವೆ ನಮ್ಮ ಕುಟುಂಬಕ್ಕೆ ಹಾಗೂ ದೊಡ್ಡಗೌಡರಿಗೆ ಅವಿನಾಭಾವ ಸಂಬಂಧವಿದೆ. ರಾಜಕಾರಣದ ಸಂಕಷ್ಠದ ಸಮಯದಲ್ಲಿ ದೇವೇಗೌಡರ ಬೆನ್ನಿಗೆ ನಿಂತು ಕಾಪಾಡಿದ ಮಂಡ್ಯ ಜಿಲ್ಲೆಯ ಜನರ ಋಣವನ್ನು ತೀರಿಸುವ ಸುಸಂದರ್ಭ ಈಗ ಬಂದಿದೆ. ದೇಶದ ಸುಭದ್ರತೆಗಾಗಿ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ನರೇಂದ್ರಮೋದಿ ಅವರು ಆಯ್ಕೆಯಾಗಬೇಕು ಎಂಬ ಸಂಕಲ್ಪ ಮಾಡಿರುವ ದೇವೇಗೌಡರು ಬಿಜೆಪಿ ಪಕ್ಷದೊಂದಿಗೆ ಜೆಡಿಎಸ್ ಪಕ್ಷವನ್ನು ಮೈತ್ರಿ ಮಾಡಿಕೊಂಡು ಧರ್ಮಯುದ್ಧವನ್ನು ಮೈತ್ರಿಪಕ್ಷದ ಅಭ್ಯರ್ಥಿಗಳು ಒಂದಾಗಿ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಯಾರು ಏನೇ ಹೇಳಿದರೂ ಮೈತ್ರಿ ಅಭ್ಯರ್ಥಿಗಳು ಕಾಂಗ್ರೇಸ್ ನ ಗರ್ವಭಂಗ ಮಾಡುವುದು ಶತಸಿದ್ಧ ಎಂದು ಭವಿಷ್ಯ ನುಡಿದರು.
ಮೈಸೂರು-ಕೊಡಗು ಸಂಸದ ಪ್ರತಾಫಸಿಂಹ, ಶಾಸಕ ಹೆಚ್.ಟಿ.ಮಂಜು, ಮಾಜಿಸಚಿವ ಸಿ.ಎಸ್.ಪುಟ್ಟರಾಜು, ಮಾಜಿಶಾಸಕರಾದ ರವೀಂದ್ರಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಇಂದ್ರೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಇದ್ದರು.