ಮಂಡ್ಯ: ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಆಹ್ವಾನಿಸಿದ್ದೇವೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಮತ್ತೊಮ್ಮೆ ಅವರನ್ನು ಮಂಡ್ಯದಿಂದ ಕಣಕ್ಕಿಳಿಸುವಂತೆ ಕೋರಿದ್ದೇವೆ. ಅಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಪ್ರಸ್ತುತ ಜಿಲ್ಲೆಯಲ್ಲಿರುವ ರಾಜಕೀಯ ಸನ್ನಿವೇಶವೇ ಬೇರೆ. ಒಮ್ಮೆ ನಿಖಿಲ್ ಸ್ಪರ್ಧೆ ಬೇಡ ಎಂದಾದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದೇವೆ. ವರಿಷ್ಠರು ಏನು ನಿರ್ಧಾರ ಮಾಡುವರೋ ನೋಡಬೇಕು ಎಂದು ಹೇಳಿದರು.