ತಿ.ನರಸೀಪುರ: ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಬಗ್ಗೆ ಹಲವರು ಇಲ್ಲ ಸಲ್ಲದ ಅಪಪ್ರಚಾರ ನಡೆಸುತ್ತಿದ್ದು,ಇದಕ್ಕೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಬದಲಾಗಿ ಕ್ಷೇತ್ರದ ಅಭಿವೃದ್ಧಿಯ ಮುಖೇನ ತಕ್ಕ ಉತ್ತರ ನೀಡುತ್ತೇನೆ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಸೋಸಲೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ 3ಕೋಟಿ 65 ರೂಗಳ ವೆಚ್ಚದಲ್ಲಿ ಚರಂಡಿ, ರಸ್ತೆ, ಅಂಗನವಾಡಿ, ಕನಕಭವನ, ಬಸವ ಭವನ, ವಾಟರ್ ಹೆಡ್ ಟ್ಯಾಂಕ್, ಡಾ.ಬಿ.ಆರ್. ಅಂಬೇಡ್ಕರ್ ಭವನ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆಸುವ ಸಂದರ್ಭದಲ್ಲಿ ಉಕ್ಕಲಗೆರೆ ಗ್ರಾಮದಲ್ಲಿ ಕನಕ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಸಹಿಸದೆ, ಈಗ ಭೂಮಿ ಪೂಜೆ ನಡೆಸುತ್ತಿರುವ ಕಾಮಗಾರಿಗಳು 2018ಕ್ಕಿಂತ ಹಿಂದಿನವು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಆ ವ್ಯಕ್ತಿಗೆ ತಕ್ಕ ಉತ್ತರ ನೀಡುತ್ತವೆ. ನಾನು ಯಾವುದೇ ಕಾರಣಕ್ಕೂ ಅವರ ಆರೋಪಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
ನಾನು ದ್ವೇಷ ರಾಜಕಾರಣ ಮಾಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿ ನನ್ನ ಮೊದಲ ಆದ್ಯತೆ. ಒಬ್ಬ ಜಿಲ್ಲಾ ಪಂಚಾಯತ್ ಸದಸ್ಯ ಮತ್ತು ಈ ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಜನರ ಮನಸ್ಸು ಮುಟ್ಟಿದ್ದೇನೆ. ಕ್ಷೇತ್ರದ ಪ್ರತಿ ಮತದಾರನ ಕಷ್ಟಗಳಿಗೆ ಸ್ಪಂದಿಸುವ ಶಕ್ತಿಯನ್ನು ದೇವರು ನನಗೆ ಕರುಣಿಸಲಿ ಎಂಬ ಆಶಯ ವ್ಯಕ್ತಪಡಿಸಿದರು. ಯಾವುದೇ ಪಕ್ಷ ವ್ಯಕ್ತಿ ನನ್ನ ಬಳಿ ಬಂದರೂ ಪಕ್ಷಪಾತ ಮಾಡದೆ ಅವರ ಕೆಲಸ ಮಾಡಿಕೊಡುವುದಾಗಿ ತಿಳಿಸಿದರು.