ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಸನ್ನದ್ದವಾಗಿರುವ ಕೆ.ಆರ್.ಪೇಟೆ ತಹಶೀಲ್ದಾರ್ ಡಾ.ಲೋಕೇಶ್ ತಾಲ್ಲೂಕಿನ ವ್ಯಾಪ್ತಿಯ ಚೆಕ್ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಮೈಸೂರು ಜಿಲ್ಲಾ ವ್ಯಾಪ್ತಿಯ ಭೇರ್ಯ ರಸ್ತೆಯ ಸಿಂಗನಹಳ್ಳಿ ಗ್ರಾಮ, ಚನ್ನರಾಯಪಟ್ಟಣ ರಸ್ತೆಯ ಗಡಿ ಗ್ರಾಮವಾದ ಆನೆಗೋಳ ಗ್ರಾಮ ಹಾಗೂ ಶ್ರವಣಬೆಳಗೊಳ ರಸ್ತೆಯ ಅಘಲಯ ಗ್ರಾಮದಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಣಕಾಸು, ಮದ್ಯ ಸೇರಿದಂತೆ ಯಾವುದೇ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುವುದನ್ನು ತಡೆಯಲು ಹದ್ದಿನ ಕಣ್ಣು ಇಡಲಾಗಿದೆ. ಬಿಗಿ ಪೊಲೀಸ್ ಭದ್ರತೆ ಕೈಗೊಂಡು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಡಾ. ಲೋಕೇಶ್ ಮಾಹಿತಿ ನೀಡಿದ್ದಾರೆ.
ಭಾರತ ದೇಶದ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೆ.ಆರ್.ಪೇಟೆ ತಾಲ್ಲೂಕಿನ 261 ಮತಗಟ್ಟೆಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. 1500 ಜನ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ.
ಕೆ.ಆರ್.ಪೇಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರವಾದ ಚಟುವಟಿಕೆಗಳು ನಡೆಯುತ್ತಿರುವುದು ಕಂಡು ಬಂದರೆ ತಾಲೂಕು ಕಚೇರಿಗೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ತಾಲ್ಲೂಕು ಆಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕೆಂದು ಸಹ ಚುನಾವಣಾಧಿಕಾರಿಗಳೂ ಆಗಿರುವ ತಹಶೀಲ್ದಾರ್ ಡಾ. ಲೋಕೇಶ್ ತಿಳಿಸಿದರು. ಈ ಸಂಧರ್ಭದಲ್ಲಿ ಚುನಾವಣಾ ಶಾಖೆಯ ಸಿಬ್ಬಂದಿ ಹಾಜರಿದ್ದರು.