ಮೈಸೂರು: ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದಲ್ಲಿ ಇಂದು ಶನಿವಾರ ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ನಂಜನಗೂಡು ತಾಲ್ಲೂಕು ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಕೂಸಿನಮನೆ ಮತ್ತು ಶಿಶುಪಾಲನಾ ಕೇಂದ್ರವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮಾಂತರ ಭಾಗದಲ್ಲಿ ಮಹಿಳಾ ಕೂಲಿ ಕಾರ್ಮಿಕರಿಗೆ ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಯಾರು ಇರುವುದಿಲ್ಲ. ಮಕ್ಕಳ ಲಾಲನೆ ಪಾಲನೆಗೆ ತಾಯಿ ಸಾಕಷ್ಟು ಸಮಯ ನೀಡಬೇಕಾಗುತ್ತದೆ. ಆದರೆ, ಕೆಲಸ ಮಾಡುವ ಮಹಿಳೆ ಮಕ್ಕಳಿಗೆ ಸಮಯ ಕೊಡುವುದಾಗಿ ನೋಡಿಕೊಳ್ಳುವುದಕ್ಕಾಗಲಿ ಆಗುವುದಿಲ್ಲ.
ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮಕ್ಕಳ ಪಾಲನೆಗಾಗಿ ಸರ್ಕಾರ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿ, ಆರೋಗ್ಯವಂತರಾಗಿ ನೋಡಿಕೊಳ್ಳಲು ತರಬೇತಿ ಪಡೆದ ಸಿಬ್ಬಂದಿಗಳನ್ನು ನಿಯೋಜಿಸಿ ಕೂಸಿನ ಮನೆ ಯೋಜನೆ ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಕೆ. ಮಾರುತಿ, ದೇಬೂರು ಮಹದೇವಪ್ಪ, ಅಶೋಕ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.