ಮೈಸೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಿರುವ ಹಲವು ಸೌಲಭ್ಯಗಳನ್ನು ರೈತರಿಗೆ, ಸಾರ್ವಜನಿಕರಿಗೆ ತಲುಪಿಸಲು ಪಂಚಾಯಿತಿ ಪಿಡಿಓಗಳು ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡರು ಹೇಳಿದರು
ಮೈಸೂರು ತಾಲ್ಲೂಕಿನ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಗಳು ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿ ಪಂಚಾಯಿತಿ ವ್ಯಾಪ್ತಿಯಲ್ಲಿಗೊಳಪಡುವ ಗ್ರಾಮಗಳ ಅಭಿವೃದ್ಧಿ ಪೂರಕವಾಗುವಂತೆ ರೈತರು ಹಾಗೂ ಜನರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳುಬೇಕು ಎಂದು ತಿಳಿಸಿದರು.
ಪ್ರತಿಯೊಂದು ಗ್ರಾಮದಲ್ಲಿರುವ ಸ್ಮಶಾನಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಬೇಕು. ಜಾಗದ ಸಮಸ್ಯೆ ಇರುವ ಗ್ರಾಮದಲ್ಲಿ ಅವಶ್ಯಕವಿರುವಷ್ಟು ಜಾಗ ಗುರುತಿಸಿ ಹೊಸದಾಗಿ ಸ್ಮಶಾನ ನಿರ್ಮಿಸಬೇಕು. ಹಳ್ಳಿಗಳ ಪ್ರಮುಖ ಜಲಮೂಲಗಳಾದ ಕೆರೆ, ಕಟ್ಟೆ, ಕಲ್ಯಾಣಿಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಬೇಕು ಎಂದರು.
ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ, ಗ್ರಾಮೀಣ ಶಾಲೆಗಳಲ್ಲಿ ಸುಸಜ್ಜಿತ ಶೌಚಾಲಯ, ಶಾಲಾ ಕಾಂಪೌಂಡ್ ನಿರ್ಮಿಸಲು ಕ್ರಮವಹಿಸಬೇಕು ಗ್ರಾಮದ ಪ್ರತೀ ಮನೆಯಲ್ಲಿ ಶೌಚಾಲಯ, ಸೋಕ್ ಫೀಟ್ ನಿರ್ಮಿಸಿ ಸ್ವಚ್ಛತೆ ಕಾಪಾಡುವ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ನರೇಗಾ ಯೋಜನೆಯಡಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ನೆರವಾಗುವಂತೆ ಅಚ್ಚುಕಟ್ಟಾದ ಮೆಂಟ್ಲಿಂಗ್ ರಸ್ತೆ ನಿರ್ಮಿಸಬೇಕು. ನೀರಾವರಿ ಸೌಲಭ್ಯಗಳಿಗೆ ತೊಡಕಾಗದಂತೆ ನಾಲೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಉಪ ಕಾರ್ಯದರ್ಶಿ ಹಾಗೂ ತಾಪಂ ಆಡಳಿತಾಧಿಕಾರಿ ಎಸ್.ಪ್ರೇಮ್ ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ರಮೇಶ್, ತಹಶಿಲ್ದಾರ್ ಗಿರೀಶ್, ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.