ಮೈಸೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಕಾಂಗ್ರೆಸ್ನವರಿಗೆ ಇಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಮೀನಾಕ್ಷಿ ಲೇಖಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ ಅಧಿನಾಯಕ ಸೋನಿಯಾ ಗಾಂಧಿ ಹಾಗೂ ಅವರ ಅಳಿಯ ವಾದ್ರಾ, ಮಗ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ, ಕಾಂಗ್ರೆಸ್ನ ಬಹುತೇಕ ನಾಯಕರು ಭ್ರಷ್ಟಾಚಾರದ ಆರೋಪದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗಿದ್ದಾರೆ. ಹಲವರು ಜೈಲಿಗೆ ಕೂಡ ಹೋಗಿ ಬಂದಿದ್ದಾರೆ. ಇಂತಹ ನಾಯಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸುವುದಕ್ಕೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು.
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಇವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದಂತೆ ಯಾವುದೇ ದಾಖಲಾತಿಗಳನ್ನು ನೀಡುತ್ತಿಲ್ಲ. ಇವರ ಆರೋಪಗಳನ್ನು ಜನರು ನಂಬುವುದೇ ಇಲ್ಲ. ಬಿಜೆಪಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿದೆ. ದೇಶದ ಎಲ್ಲಾ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ, ಮತದಾರರು ಬಿಜೆಪಿಗೆ ಮತ ನೀಡಿ ಗೆಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕೂಡ ಮತದಾರರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮೆಚ್ಚಿ, ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವುದರೊಂದಿಗೆ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದಿಂದ ಯಾವುದೇ ನಾಯಕರು ಹೊರಹೋದರು ಅದರಿಂದ ಯಾವುದೇ ಹಾನಿ ಪಕ್ಷಕ್ಕೆ ಆಗುವುದಿಲ್ಲ. ಏಕೆಂದರೆ ಬಿಜೆಪಿ ಕಾರ್ಯಕರ್ತರ ಪಕ್ಷ. ಕಾರ್ಯಕರ್ತರೇ ಈ ಪಕ್ಷಕ್ಕೆ ಶಕ್ತಿ. ಅಲ್ಲದೆ ಜನರು ಪಕ್ಷಕ್ಕೆ ಮತ ನೀಡುವುದು ಮೋದಿ ಆಡಳಿತವನ್ನು ಮೆಚ್ಚಿ, ಯಾವುದೇ ಸ್ಥಳೀಯ ನಾಯಕರಿಗಲ್ಲ. ಕರ್ನಾಟಕದ ವಿಧಾನಸಭೆ ಚುನಾವಣೆ ಪಕ್ಷದ ಎಲ್ಲರೂ ನಾಯಕತ್ವದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೇ ಶ್ರೀನಿವಾಸಗೌಡ, ಮೈಸೂರು ವಿಭಾಗ ಬಿಜೆಪಿ ಮಾಧ್ಯಮ ಕೇಂದ್ರದ ಸಂಯೋಜಕ ನಾಗೇಶ್, ಜಿಲ್ಲಾ ಸಹ ವಕ್ತಾರ ಡಾ. ಕೆ ವಸಂತಕುಮಾರ್, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ಸಂಚಾಲಕ ಕೇಬಲ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.