ಮೈಸೂರು: ಚಾಮುಂಡಿಬೆಟ್ಟ ಸೇರಿದಂತೆ ನಗರದಲ್ಲಿ ಚಾಮುಂಡೇಶ್ವರಿ ವರ್ಧಂತ್ಯುತ್ಸವದ ಪ್ರಯುಕ್ತ ವಿಶೇಷಪೂಜೆಗಳನ್ನು ನಡೆಸಿ ಅನ್ನಸಂತರ್ಪಣೆ ನಡೆಸಲಾಯಿತು.
ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಕನಕಾಂಬರ ಬಣ್ಣದ ಸೀರೆಯುಟ್ಟು, ವಿಶೇಷವಾಗಿ ಅಲಂಕೃತಗೊಂಡು, ಚಿನ್ನದ ಪಲ್ಲಕ್ಕಿಯಲ್ಲಿ ವಿರಾಜಮಾನಳಾಗಿದ್ದು, ಭಕ್ತರು ತಾಯಿಯ ದರ್ಶನ ಪಡೆದು ಪುನೀತರಾದರು.
ಮುಂಜಾನೆಯಿಂದಲೇ ಚಾಮುಂಡಿಬೆಟ್ಟದತ್ತ ಧಾವಿಸಿ ಬಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ತೆರಳಿ ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದು ಪುನೀತರಾದರು. ಚಾಮುಂಡೇಶ್ವರಿಯ ಹುಟ್ಟಿದ ಹಬ್ಬದ ವಿಶೇಷ ದಿನವಾದ್ದರಿಂದ ನಗರ, ಜಿಲ್ಲೆ ಸೇರಿದಂತೆ ರಾಜ್ಯ, ಹೊರರಾಜ್ಯದ ಭಕ್ತರು ಮುಂಜಾನೆಯಿಂದಲೇ ಬೆಟ್ಟಕ್ಕೆ ಆಗಮಿಸಿ ಭಕ್ತಿಭಾವ ಮೆರೆದರಲ್ಲದೆ ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿ ಉತ್ಸವಕ್ಕೆ ಮೆರುಗು ನೀಡಿದರು.
ಮುಂಜಾನೆ 4ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ತಾಯಿಯ ವರ್ಧಂತ್ಯುತ್ಸವದ ವಿಶೇಷ ದಿನವಾದ್ದರಿಂದ ಮೊದಲು ಅಮ್ಮನಿಗೆ ಅಭ್ಯಂಜನ ಸ್ನಾನ ಮಾಡಿಸಿ, ಬಳಿಕ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃ ತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ 8 ಗಂಟೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ನೆರವೇರಿಸಲಾಯಿತು. ರಾತ್ರಿ 9 ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದರ್ಶನದ ವೇಳೆ ಯಾವುದೇ ನೂಕು ನುಗ್ಗಲಿಗೆ ಅವಕಾಶವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.
ರಾಜಮಾತೆ ಪ್ರಮೋದಾದೇವಿ ಒಡೆಯರ್, ಪತ್ನಿ ತ್ರಿಷಿಕಾ ಸಿಂಗ್ ಅವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಅವರು 10 ಗಂಟೆವರೆಗೂ ಗರ್ಭಗುಡಿಯಲ್ಲೇ ಕುಳಿತಿದ್ದರು. 9.30ಕ್ಕೆ ತಾಯಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ಉತ್ಸಮ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಕೂರಿಸಿ ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. 10.30ಕ್ಕೆ ದೇವಸ್ಥಾನದ ಮುಂಭಾಗದಲ್ಲಿ ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಯದುವೀರ್ ದಂಪತಿ, ಪ್ರಮೋದಾದೇವಿ ಒಡೆಯರ್ ಪಲ್ಲಕ್ಕಿಯನ್ನು ಎಳೆದು ಉತ್ಸವಕ್ಕೆ ಚಾಲನೆ ನೀಡಿದರು. ಉತ್ಸವದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಎಂದಿನಂತೆ ಮಲ್ಟಿಲೆವೆಲ್ ಪಾರ್ಕಿಂಗ್ ಜಾಗದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬಾಕ್ಸ್
ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಚೆನ್ನಮ್ಮ ಅವರೊಂದಿಗೆ ಬೆಟ್ಟಕ್ಕೆ ಆಗಮಿಸಿದ ಸಿಎಂ ಮೊದಲು ಪಲ್ಲಕ್ಕಿ ಉತ್ಸವದಲ್ಲಿ ವಿರಾಜಮಾನಳಾಗಿದ್ದ ಚಾಮುಂಡೇಶ್ವರಿಯ ದರ್ಶನ ಪಡೆದು ನಮಿಸಿದರು. ಬಳಿಕ ದೇವಸ್ಥಾನಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ನಿರಂಜನಕುಮಾರ್, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಕೌಟಿಲ್ಯ ರಘು ಸಾಥ್ ನೀಡಿದರು. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸಾಥ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಇದ್ದರು.