ಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತಲ್ಲದೆ ಶಕ್ತಿಸ್ವರೂಪಿಣಿಯ ದರ್ಶನ ಪಡೆಯುವುದರೊಂದಿಗೆ ಆಷಾಢ ಶುಕ್ರವಾರ ಸಂಪನ್ನವಾಯಿತು.
ಮುಂಜಾನೆಯಿಂದಲೇ ತಾಯಿಯ ದರ್ಶನದ ಹಂಬಲದಿಂದ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು. ಯಾವುದೇ ಗಲಾಟೆ ಗೊಂದಲಗಳಿಗೆ ಆಸ್ಪದ ಕೊಡದೆ ಸಾವಧಾನವಾಗಿ ಸರತಿ ಸಾಲಿನಲ್ಲಿ ದೇವಸ್ಥಾನಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದು ಶಿರಭಾಗಿ ನಮಿಸಿ, ಭಕ್ತಿಭಾವ ಮೆರೆದರು. ನಟ ದರ್ಶನ್, ಸಂಸದ ಪ್ರತಾಪಸಿಂಹ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಕಡೆಯ ಶುಕ್ರವಾರವಾದ್ದರಿಂದ ಕಳೆದ ವಾರಕ್ಕೆ ಹೋಲಿಸಿದರೆ ಹೆಚ್ಚಿನ ಭಕ್ತರು ಆಗಮಿಸಿದ್ದರು.
ಕಡೆಯ ಆಷಾಢ ಶುಕ್ರವಾದ್ದರಿಂದ ಅಮ್ಮನಿಗೆ ವಿಶೇಷ ಪೂಜೆ ನೆರವೇರಿಸಲಾತು. ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ಆರಂಭವಾದವು. ದೇವಿಗೆ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ಮತ್ತೊಮ್ಮೆ ಮಹಾಮಂಗಳಾರತಿ ನೆರವೇರಿಸಲಾಯಿತು. ರಾತ್ರಿ 10ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಆಷಾಢ ಮಾಸದ ಕಡೆಯ ಶುಕ್ರವಾರವಾದ್ದರಿಂದ ದೇವಸ್ಥಾನ ವಿಶೇಷ ರೀತಿಯಲ್ಲಿ ಅಲಂಕೃತಗೊಂಡಿತ್ತು. ಕಳೆದ 3ಶುಕ್ರವಾರ ಹಾಗೂ ವರ್ಧಂತ್ಯುತ್ಸವದಂತೆ ದೇವಸ್ಥಾನದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ವಿವಿಧ ಬಣ್ಣಗಳ ಸೇವಂತಿಗೆ, ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ದೇವಾಲಯದ ಪ್ರವೇಶದ್ವಾರ, ಹೊರಾವರಣವೂ ವಿಶೇಷವಾಗಿ ಸಿಂಗಾರಗೊಂಡಿತ್ತು.
ಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತರ ದಂಡು ಹರಿದುಬಂದಿತ್ತು. ಕೆಲವರು ಸಾರಿಗೆ ಬಸ್ನಲ್ಲಿ ಬಂದರೆ ಇನ್ನು ಕೆಲವರು ಮೆಟ್ಟಿಲುಗಳು ಮೂಲಕ ಬೆಟ್ಟಕ್ಕೆ ಆಗಮಿಸಿದರು. ಚಾಮುಂಡಿಬೆಟ್ಟದ ಪಾದದಿಂದ ಪ್ರತಿ ಮೆಟ್ಟಿಲಿಗೂ ಅರಿಶಿಣ ಕುಂಕುಮ ಹೂಗಳನ್ನಿಟ್ಟು, ಕರ್ಪೂರ ಹಚ್ಚಿ ಭಕ್ತಿ ಭಾವದಿಂದ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದರು.
ಕಳೆದ ವಾರಗಳಂತೆಯೇ ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿ ಬೆಂಗಳೂರಿನ ಜಿ.ಕೆ.ಫೌಂಡೇಷನ್ನ ಜಿ.ಮಹೇಶ್ ಎಂಬುವವರು ಪ್ರಸಾದ ವ್ಯವಸ್ಥೆ ಮಾಡಿದ್ದರು. ಬೆಳಗ್ಗೆ 7ರಿಂದ ಪ್ರಾರಂಭವಾದ ಪ್ರಸಾದ ವಿತರಣೆ ರಾತ್ರಿಯವರೆಗೂ ನಡೆಯಿತು