ಮೈಸೂರು: ಮೂರನೇ ಆಷಾಢದ ಶುಕ್ರವಾರದ ಹಿನ್ನಲೆಯಲ್ಲಿ ಸಹಸ್ರಾರು ಮಂದಿ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಈ ಬಾರಿ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಮುಂಜಾನೆ ಜಿಟಿ ಜಿಟಿ ಮಳೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದರು. ಕೆಲವರು ಬಸ್ ಮೂಲಕ ತೆರಳಿದರೆ ಮತ್ತೆ ಕೆಲವರು ಸಾವಿರ ಮೆಟ್ಟಿಲೇರಿ ಪ್ರತಿ ಮೆಟ್ಟಿಲಿಗೂ ಅರಶಿನ ಕುಂಕುಮ ಹಚ್ಚಿ ದೇವರ ಕೃಪೆಗೆ ಪಾತ್ರರಾದರು.
ಮುಂಜಾನೆ ಮೂರು ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ಮೊದಲು ಚಾಮುಂಡೇಶ್ವರಿ ವಿಗ್ರಹವನ್ನು ಶುದ್ಧಗೊಳಿಸಿ, ಬಳಿಕ ವಿಶೇಷವಾಗಿ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ಅಭಿಷೇಕ ನೆರವೇರಿಸಲಾಯಿತು. ರಾತ್ರಿ 9 ಗಂಟೆವರೆಗೂ ಭಕ್ತರು ದರ್ಶನ ಪಡೆದರು.
ತಾಯಿ ಚಾಮುಂಡೇಶ್ವರಿಗೆ ಹೊನ್ನಿನ ಬಾಡರಿನ ಹಸಿರು ಸೀರೆಯುಡಿಸಿ ಅಲಂಕಾರ ಮಾಡಲಾಗಿತ್ತು. ಅಲ್ಲದೆ ದೇಗುಲದ ಆವರಣವನ್ನು ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಹೊರಗೆ ದೇವಾಲಯದ ಪ್ರವೇಶದ್ವಾರ, ಹೊರಭಾಗವನ್ನೂ ಕೂಡ ಹೂವು ಹಾಗೂ ತೋರಣದಿಂದ ಅಲಂಕರಿಸಲಾಗಿತ್ತು.
ಈ ಬಾರಿ ಬೆಟ್ಟಕ್ಕೆ ಆಗಮಿಸಿದ ಭಕ್ತರಿಗೆ ಮಲ್ಟಿ ಲೆವೆಲ್ ಪಾರ್ಕಿಂಗ್ ಸ್ಥಳದಲ್ಲಿ ದೇವುಬಾಯಿ ರಾಜಾ ವೈದ್ಯಪಂಡಿತ್ ಪಿ.ಹೆಚ್.ಚಂದ್ರಬಾನ್ ಸಿಂಗ್ ಮೆಮೋರಿಯಲ್ ಹರ್ಬಲ್ ಗಾರ್ಡನ್ ಮತ್ತು ಹೋಲಿಸ್ಟಿಕ್ ಹಾಸ್ಪಿಟಲ್ ಕಾಂಪ್ಲೆಕ್ಸ್ ಟ್ರಸ್ಟ್ ವತಿಯಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 8ರಿಂದ ರಾತ್ರಿ 7 ಗಂಟೆಯವರೆಗೂ ಪ್ರಸಾದ ನೀಡಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಹೆಚ್.ಡಿ.ರೇವಣ್ಣ, ಎಲ್.ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ ಸೇರಿದಂತೆ ಹಲವರು ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದದ್ದು ವಿಶೇಷವಾಗಿತ್ತು.