ಮೈಸೂರು: ಎಲ್ಲ ದಾನಗಳಲ್ಲೇ ರಕ್ತದಾನ ಶ್ರೇಷ್ಠ ದಾನವಾಗಿದ್ದು, ರಕ್ತವನ್ನು ದಾನ ಮಾಡುವುದು ಒಳ್ಳೆಯ ಕಾರ್ಯವಾಗಿರುವುದಲ್ಲದೆ, ರಕ್ತದಾನ ಮತ್ತೊಬ್ಬರ ಪ್ರಾಣ ಉಳಿಸುವ ಜತೆಗೆ ವ್ಯಕ್ತಿ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಎಸ್ ಡಿಎಂ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಸಾಯಿನಾಥ್ ಮಲ್ಲಿಗೆಮಾಡು ಹೇಳಿದರು.
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಮೈಸೂರು ಮಕ್ಕಳ ಕೂಟ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಮಹಾವಿದ್ಯಾಲಯ ಎನ್ ಎಸ್ಎಸ್ ಘಟಕ ವತಿಯಿಂದ ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ
ಕೃಷ್ಣಮೂರ್ತಿಪುರಂನಲ್ಲಿರುವ ಎಸ್ ಡಿಎಂ ಕಾಲೇಜಿನ ಆವರಣದಲ್ಲಿ 100 ಜನ ಕಾಲೇಜಿನ ವಿದ್ಯಾರ್ಥಿನಿಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಕ್ತಕ್ಕೆ ಪರ್ಯಾಯ ಇಲ್ಲ. ಆದ್ದರಿಂದ ಸಾವಿನ ಅಂಚಿನಲ್ಲಿರುವವರ ಜೀವ ಉಳಿಸಬೇಕಾದರೆ ರಕ್ತವೇ ನೀಡಬೇಕು. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. 18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.
ಒಂದು ಯೂನಿಟ್ ರಕ್ತದಿಂದ ನಾಲ್ಕು ಜನರ ಪ್ರಾಣ ಉಳಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಉತ್ಸಾಹದಿಂದ ರಕ್ತದಾನ ಮಾಡಲು ಮುಂದೆ ಬರಬೇಕು. ಇದರಿಂದ ಪ್ರಾಣ ಹಾನಿಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು. ರಕ್ತದಾನ ಇತರರಿಗೆ ಮರುಜನ್ಮನೀಡುವ ಶ್ರೇಷ್ಠ ಮತ್ತು ಸಾರ್ಥಕ ಸೇವೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ, ರಕ್ತದ ಅವಶ್ಯಕತೆ ಉಂಟಾದಾಗ ಮಾತ್ರ ರಕ್ತದ ಮಹತ್ವ ಪ್ರತಿಯೊಬ್ಬರಿಗೂ ಅರಿವಾಗುತ್ತದೆ. ಆದ್ದರಿಂದ, ಯುವಕರು ರಕ್ತದಾನದ ಕುರಿತು ಇರುವ ಮೌಢ್ಯಗಳನ್ನು ತೊಡೆಯುವ ಕೆಲಸ ಮಾಡಬೇಕು. ಒಬ್ಬ ದಾನಿಯಿಂದ ಪಡೆದ ರಕ್ತವೂ ಅದೇ ರಕ್ತದ ಗುಂಪಿಗೆ ಸೇರಿದ ವ್ಯಕ್ತಿಗೆ ಉಪಯೋಗಿಸಬಹುದು. ದಾನಿಯ ಆರೋಗ್ಯದ ಮೇಲೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜೀವಧಾರ ರಕ್ತನಿಧಿ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ಮಾನಸ ರಾಜ್, ಪ್ರೊ.ಕೆ ಎಸ್ ಸುಕ್ರೋಸ್, ಬಿ ಎನ್ ಮಾರುತಿ ಪ್ರಸನ್ನ ಹಾಗೂ ಇನ್ನಿತರರು ಇದ್ದರು.