ಮೈಸೂರು: ಸುಸರ್ಜಿತವಾದ ಬೆಂಗಳೂರು ನಗರ ನಿರ್ಮಾಣದಲ್ಲಿ ಕೆಂಪೇಗೌಡ ಅವರ ಕೊಡುಗೆ ಅಪಾರವಾಗಿದ್ದು, ಅವರ ಕೊಡುಗೆಯಿಂದ ಇಂದು ಸುಂದರವಾದ ಬೆಂಗಳೂರು ನಗರವನ್ನು ಕಾಣಬಹುದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ವಿಧಾನಸಭಾ ಶಾಸಕರಾದ ಜಿ.ಟಿ.ದೇವೇಗೌಡ ಅವರು ತಿಳಿಸಿದರು.
ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ 513 ನೇ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿ, ಕೆಂಪೇಗೌಡರ 504 ನೇ ಜಯಂತೋತ್ಸವವನ್ನು 2008 ರಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿತ್ತು, ಮೈಸೂರು ಭಾಗದಲ್ಲಿ ಪ್ರಥಮವಾಗಿ ಆಯೋಜಿಸಲಾಗಿದ್ದ ಸಂದರ್ಭದಲ್ಲಿ ಎಲ್ಲಾ ಲೋಕಸಭಾ ಸದಸ್ಯರು, ಶಾಸಕರು ನೇತೃತ್ವದಲ್ಲಿ ಅಭೂತಪೂರ್ವವಾದ ಕಾರ್ಯಕ್ರಮವನ್ನು ಮೈಸೂರಿನಲ್ಲಿ ಆಚರಿಸಲಾಯಿತು. ಕೆಂಪೇಗೌಡರ 504ನೇ ಜಯಂತೋತ್ಸವ ವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಣಬ್ ಮುಖರ್ಜಿ ಹಾಗೂ ಗೋಪಾಲಗೌಡರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. 2015 ರ ನವೆಂಬರ್ 4 ರಂದು ಆಯೋಜಿಸಿದ್ದ ಸಮಾವೇಶದಲ್ಲಿ ಕೆಂಪೇಗೌಡ ಪ್ರಾಧಿಕಾರ ರಚನೆ ಮಾಡಬೇಕು. ಅನುದಾನ ಬಿಡುಗಡೆ ಮಾಡಬೇಕು ಹಾಗೂ ಅದರ ಬಗ್ಗೆ ಆಳವಾದ ಅಧ್ಯಯನ ಮಾಡಬೇಕೆಂದು ಮನವಿ ಮಾಡಿದ್ದೆವು ಎಂದು ತಿಳಿಸಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂದು ವಿದೇಶಾಂಗ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ನೇತೃತ್ವದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಬಿರುದನ್ನು ನೀಡಲಾಯಿತು. ಕೆಂಪೇಗೌಡರು ಕೃಷ್ಣದೇವರಾಯರ ಒಡನಾಟವನ್ನು ಇಟ್ಟುಕೊಂಡು ವಜ್ರವೈಡೂರ್ಯಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕೆಂಪೇಗೌಡರು ಕೋಟೆ, ಕೆರೆಗಳನ್ನು ಹಾಗೂ ಎಲ್ಲಾ ಸಮಾಜದವರಿಗೂ ಕೂಡ 27 ಪೇಟೆಗಳನ್ನು ಬೆಂಗಳೂರಿನಲ್ಲಿ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದರು.
ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಬೆಂಗಳೂರನ್ನು ನಿರ್ಮಾಣ ಮಾಡಬೇಕಾದ ಸಂದರ್ಭದಲ್ಲಿ ಯಾವುದೇ ಆಧುನಿಕ ತಂತ್ರಜ್ಞಾನ ಯೋಜನೆಗಳು ಇರಲಿಲ್ಲ. ಇಂತಹ ವಾತಾವರಣದಲ್ಲಿ ಕೂಡ ಕೆಂಪೇಗೌಡರು ಪ್ರಶಸ್ತವಾದ ಸ್ಥಳವನ್ನು ಆಯ್ಕೆಮಾಡಿ ಬೆಂಗಳೂರನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಅನುಕೂಲ ವಾಸಕ್ಕೆ ಯೋಗ್ಯವಾದಂತಹ ವಾತಾವರಣವನ್ನು ಹೊಂದಿದೆ. ವರ್ಷದ 365 ದಿನವೂ ಕೂಡ ವಾಸದ ಅನುಕೂಲವಾಗುವಂಥ ಏಕೈಕ ನಗರ ಎಂದರೆ ಬೆಂಗಳೂರು ಮಾತ್ರ. ಇಂತಹ ನಗರ ನಿರ್ಮಾಣ ಮಾಡಿದ ವ್ಯಕ್ತಿಯನ್ನು ನಾವು ಧನ್ಯತಾಭಾವದಿಂದ ಅವರ ಸ್ಮರಣೆಯನ್ನು ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಸೋಮನಾಥ ಸ್ವಾಮೀಜಿ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದ ಪಾಲನೇತ್ರ, ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವಿರ್ ಸೇಠ್, ವಿಧಾನ ಪರಿಷತ್ ಶಾಸಕರಾದ ಸಿ.ಎನ್ ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಎ ಹೇಮಂತ್ ಕುಮಾರ್ಗೌಡ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಎನ್.ಆರ್. ಕೃಷ್ಣಪ್ಪಗೌಡ ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷರಾದ ಎನ್ ವಿ ಫಣೀಶ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು