ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕೆಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆ ವೇಳೆ ಕನಿಷ್ಠ 10-15 ಸಾವಿರ ಜನರನ್ನು ಸೇರಿಸಬೇಕು. ಆ ಮೂಲಕ ರಾಜ್ಯಕ್ಕೆ ಒಂದು ಸಂದೇಶ ಹೋಗಬೇಕು ಎಂದರು.
ಮೈಸೂರು ಕಾಂಗ್ರೆಸ್ ಉಸ್ತುವಾರಿ, ಕೇರಳ ಸಂಸದ ರಾಘವನ್ ಮಾತನಾಡಿ, ಸಿದ್ದರಾಮಯ್ಯ ಅವರ ನಾಮಪತ್ರ ಸಲ್ಲಿಕೆ ಸಮಾರಂಭವೂ ಪಕ್ಷದ ಶಕ್ತಿ ಪ್ರದರ್ಶನದ ಕಾರ್ಯಕ್ರಮವಾಗಬೇಕು. ನಮಗೆ ಒಬ್ಬರೇ ಮಾಸ್ ಲೀಡರ್ ಅವರೇ ಸಿದ್ದರಾಮಯ್ಯ, ಸಿದ್ದರಾಮಯ್ಯ ವ್ಯಕ್ತಿಯಲ್ಲ. ಶಕ್ತಿ ಎಂದು ಹೇಳಿದರು.
ಜಿಲ್ಲಾದ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಮಾತನಾಡಿ, ಗೋಳೂರು ಸರ್ಕಲ್ನಲ್ಲಿ ಎಲ್ಲರೂ ಸೇರಬೇಕು. ಅಲ್ಲಿ ಎಲ್ಲರೂ ಸೇರಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಸಿ ನಂತರ ಮಧ್ಯಾಹ್ನ 12.30ಕ್ಕೆ ಮೆರವಣಿಗೆ ಮೂಲಕ ಹೊರಟು ನಂಜನಗೂಡು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ವಿವರಿಸಿದರು.
ಬಿಜೆಯ ನಾಯಕರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸೇರ್ಪಡೆಯಾಗಿದ್ದಾರೆ. ಸರ್ವೆಯೊಂದು ಕಾಂಗ್ರೆಸ್ 156 ಸೀಟುಗಳನ್ನು ಪಡೆಯಲಿದೆ ಎಂದು ಹೇಳಿರುವುದು ಪಕ್ಷವೇ ಸಂತಸ ಪಡುವ ಸಂಗತಿ ಎಂದು ನುಡಿದರು.
ಚಾಮರಾಜ ಕ್ಷೇತ್ರದ ಅಭ್ಯರ್ಥಿ ಕೆ.ಹರೀಶ್ ಗೌಡ, ಮಹಿಳಾ ಜಿಲ್ಲಾದ್ಯಕ್ಷೆ ಲತಾ ಸಿದ್ದಶೆಟ್ಟಿ, ಮುಖಂಡ ನರಸೇಗೌಡ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಮಾಜಿ ಮುಡಾ ಅಧ್ಯಕ್ಷ ಧ್ರುವಕುಮಾರ್, ಲೋಕೇಶ್ ರಾವ್, ಶಿವನಾಗಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡೊನಾಲ್ಡ್ ನಿರ್ವಾಣಿಕ್, ಮೋಸಿನ್ ಖಾನ್ ಮುಂತಾದವರು ಭಾಗವಹಿಸಿದ್ದರು.