ಮೈಸೂರು: ನಗರದ ಕೆಆರ್ಎಸ್ ರಸ್ತೆಯಲ್ಲಿರುವ ರೈಲ್ವೆ ಕ್ವಾಟ್ರಸ್ನಲ್ಲಿ ಕ್ಲೋರಿನ್ ಅನಿಲ ಸೋರಿಕೆಯಿಂದಾಗಿ ಅಸ್ವಸ್ಥರಾಗಿದ್ದವರಲ್ಲಿ ಮೂವರಿಗೆ ಮೂವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿರುವುದಾಗಿ ತಿಳಿದು ಬಂದಿದೆ.
ಕ್ಲೋರಿನ್ ಅನಿಲ ಸೋರಿಕೆಯಿಂದ ಅಸ್ವಸ್ಥಗೊಂಡ ಕ್ಲೋರಿನ್ ಅನಿಲ ಸೋರಿಕೆಯಿಂದಾಗಿ ಉಸಿರಾಟದಲ್ಲಿ ವ್ಯತ್ಯಾಸದಿಂದ ಸುತ್ತಮುತ್ತಲಿನ ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಬಹುತೇಕ ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಾಗಿದ್ದ 28 ಮಂದಿಯಲ್ಲಿ ಮೂರು ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದು, ಹಂತ ಹಂತವಾಗಿ ಡಿಸ್ಚಾರ್ಜ್ ಮಾಡಲಾಗುತ್ತಿದೆ. ಚೆಲುವಾಂಬದಲ್ಲಿ 11 ಮಂದಿ ಮಕ್ಕಳಿದ್ದು, ಅವರಿಗೆ ಚಿಕಿತ್ಸೆ ನೀಡಿದ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತಿದೆ. ಒಂದು ಮಗುವಿಗೆ ಅಸ್ತಮವಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದರು.
ಸೋಮವಾರ ಮಧ್ಯಾಹ್ನ 3.30ಕ್ಕೆ ಸೋರಿಕೆಯ ವಿಷಯ ತಿಳಿದು ಅಗ್ನಿ ಶಾಮಕದ ದಳದ ಸಿಬ್ಬಂದಿ, ತಕ್ಷಣ ಸ್ಥಳಕ್ಕೆ ಆಗಮಿಸಿ ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಮೂಲಕ ಸೋರಿಕೆಯನ್ನು ನಿಲ್ಲಿಸಿದರು. ಕಾರ್ಯಾಚರಣೆ ವೇಳೆ ಮುಂಜಾಗ್ರತಾ ಕ್ರಮವಾಗಿ ಕೆಆರ್ಎಸ್ ರಸ್ತೆಯ ಸಂಚಾರವನ್ನು ಬಂದ್ ಮಾಡಲಾಗಿತ್ತು.
ಕಾರ್ಯಾಚರಣೆ ವೇಳೆ ನಾಲ್ಕು ಮಂದಿ ಅಗ್ನಿ ಶಾಮಕ ಸಿಬ್ಬಂದಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಕಾಲಿಕ ಕಾರ್ಯಾಚರಣೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮುಖ್ಯ ಅಗ್ನಿಶಾಮಕಾಧಿಕಾರಿ ಜಯರಾಮ್ ತಿಳಿಸಿದರು.
ರೈಲ್ವೆ ಕ್ವಾಟ್ರಸ್ನಲ್ಲಿ ಸೋರಿಕೆಯಾಗಿದ್ದ ಕ್ಲೋರಿನ್ ಅನಿಲ ಸಿಲಿಂಡರ್ ಅನ್ನು ಚಿಕ್ಕಮಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳಲ್ಲಿ ಉಂಟಾಗಿದ್ದ ಆತಂಕ ನಿವಾರಣೆಯಾಗಿದೆ