ಮೈಸೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ನಕಲಿ ನಂದಿನಿ ತುಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು.
ಮೈಸೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ಘಟಕ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಡಿವೈಎಸ್ಪಿ ಸುಮಿತ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.
ಬಂಧಿತ ನಾಲ್ವರು ಆರೋಪಿಗಳ ಪೈಕಿ ಇಬ್ಬರ ಹೆಸರು ಎಫ್ಐಆರ್ ನಲ್ಲಿ ಉಲ್ಲೇಖ ಆಗಿತ್ತು. ತನಿಖೆ ಮುಂದುವರೆದಿದ್ದು, ಆರೋಪಿಗಳು ನೀಡುವ ಸುಳಿವಿನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಅಲ್ಲದೆ, ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇರುವುದಾಗಿ ಹೇಳಿದರಲ್ಲದೆ, ಆರೋಪಿಗಳು ಹಲವು ವರ್ಷಗಳಿಂದ ಮೈಸೂರಿನಲ್ಲೇ ನೆಲೆಸಿದ್ದರೆಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದುವರೆಗಿನ ತನಿಖೆ ಪ್ರಕಾರ ಕೆಎಂಎಫ್ ನ ಸಿಬ್ಬಂದಿ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಹಾಗಂದು ಈಗಲೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ ಎಂದು ತಿಳಿಸಿದರು.
ದಾಳಿ ವೇಳೆ 10 ಟನ್ ನಕಲಿ ನಂದಿನಿ ತುಪ್ಪ ಪತ್ತೆಯಾಗಿದೆ. ಇದರ ಬಗ್ಗೆ ಸಮಗ್ರವಾದ ತನಿಖೆ ನಡೆಯುತ್ತಿದೆ. ನಕಲಿ ನಂದಿನಿ ತುಪ್ಪ ಘಟಕ ಸ್ಥಾಪನೆ ಮಾಡಲು ಬಿಲ್ಡಿಂಗ್ ನೀಡಿದ ಮಾಲೀಕರಿಂದ ಮಾಹಿತಿಯನ್ನು ಪಡೆಯುತ್ತಿದಿದ್ದೇವೆ. ಅವರು ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಅವರನ್ನು ಬಂಧಿಸುವುದಾಗಿ ಹೇಳಿದರು.
ನೈಟ್ ಕರ್ಫ್ಯೂ ಕುರಿತಂತೆ ಮಾತನಾಡಿದ ಅವರು, ಡಿ.28ರ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದು, ನೈಟ್ ಕರ್ಫ್ಯೂ ಕಟ್ಟುನಿಟ್ಟಿನ ಜಾರಿಗಾಗಿ ಜಿಲ್ಲೆಯಾದ್ಯಂತ 13 ಚೆಕ್ ಪೋಸ್ಟ್ ತೆರೆಯಲಾಗಿದೆ. ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಶೇ.50 ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಲಾಗಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫ್ಯೂಗೆ ಜನರು ಸಹಕಾರ ನೀಡಬೇಕು. ನೈಟ್ ಕರ್ಫ್ಯೂ ಕಟ್ಟುನಿಟ್ಟಿನ ಜಾರಿಗೆ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಬಾವಲಿ ಚೆಕ್ ಫೋಸ್ಟ್ನಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗಳಿಗೆ ಮೂಲ ಸೌಕರ್ಯಗಳನ್ನು ಸಮೀಪದಲ್ಲಿಯೇ ಒದಗಿಸಲಾಗಿದೆ. ಸಿಬ್ಬಂದಿಗಳಿಗೆ ಅನಾನುಕೂಲ ಉಂಟಾಗದಂತೆ ನಿಗಾವಹಿಸಲಾಗಿರುವುದಾಗಿ ಇದೇ ವೇಳೆ ತಿಳಿಸಿದರು.