ಮೈಸೂರು: ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಪ್ರಮುಖ ಆದ್ಯತೆಯನ್ನು ನೀಡಬೇಕಾಗಿದ್ದು, ಪ್ರತಿಯೊಬ್ಬರೂ ಸ್ವಚ್ಛತೆ ಕೈಗೊಳ್ಳಲು ಸಹಕಾರ ನೀಡುವಂತೆ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಗರದ 23ನೇ ವಾರ್ಡಿನಲ್ಲಿ ಕಸ ವಿಲೇವಾರಿ ಮಾಡುವ ಆಟೋಗಳ ಸಮಸ್ಯೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಮಾಲೋಚಿಸಿ ಸಮಸ್ಯೆಯನ್ನು ಬಗೆಹರಿಸಿ ಮಾತನಾಡಿದ ಅವರು, ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರ ಮನಸ್ಸು ಬದಲಾಗಬೇಕಿದೆ. ಶುದ್ಧವಾದ ಗಾಳಿ, ನೀರು, ದೈನಂದಿನ ಆಹಾರ ದೊರಕಬೇಕಾದರೆ ಪ್ರತಿಯೊಬ್ಬರೂ ಪರಿಸರವನ್ನು ಸಂರಕ್ಷಿಸುವ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಹೇಳಿದರು.
ಪ್ರತಿಯೊಬ್ಬರೂ ತಮ್ಮ ಮನೆಯ ಸ್ವಚ್ಛತೆಯನ್ನು ಕಾಪಾಡಿಕೊಂಡು ಇನ್ನೊಬ್ಬರಿಗೆ ತೊಂದರೆ ಮಾಡಬಾರದು. ಮನೆಯ ಕಸ ಪ್ಲಾಸ್ಟಿಕ್ ಇತರ ತ್ಯಾಜ್ಯಗಳನ್ನು ರಸ್ತೆ ಬದಿ, ಸಾರ್ವಜನಿಕ ಸ್ಥಳದಲ್ಲಿ ಹಾಕುವುದು ಸರಿಯಲ್ಲ. ಪರಿಸರ ಸಂರಕ್ಷಣೆ ಒತ್ತು ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ನಗರ ಪಾಲಿಕೆ ಅಧಿಕಾರಿ ಮೃತ್ಯುಂಜಯ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಮತ್ತು ಪೌರ ಕಾರ್ಮಿಕರು ಇದ್ದರು.