ಮೈಸೂರು: ಮೈಸೂರು ಇತಿಹಾಸದಲ್ಲೇ ಪ್ರಥಮ ಬಾರಿಗೆ ಮೈಸೂರು ನಗರ ಪಾಲಿಕೆ ಮೇಯರ್ ಗಾದಿ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರಿಗೆ ಮೇಯರ್ ಸ್ಥಾನ ಒಲಿದಿದೆ.
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದುಬಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮೇಯರ್ ಸ್ಥಾನ ಲಭಿಸಿದೆ. ಸುನಂದಾ ಪಾಲನೇತ್ರ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಂಬಂಧಿಯೂ ಆಗಿದ್ದಾರೆ.
ಕಳೆದ ಬಾರಿಯೇ ಮೇಯರ್ ಆಗಬೇಕಿದ್ದ ಸುನಂದಾ ಪಾಲನೇತ್ರ ರವರಿಗೆ ಈ ಬಾರಿ ವಿಜಯಲಕ್ಷ್ಮಿ ಒಲಿದಿದ್ದಾಳೆ. ಸುನಂದಾ ಪಾಲನೇತ್ರ ಅವರು 35ನೇ ಮೇಯರ್ ಆಗಿ ಗದ್ದುಗೆ ಏರಲಿದ್ದು, ಬಿಜೆಪಿ ಮೊದಲ ಬಾರಿಗೆ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇತ್ತ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದೇ ಹೇಳಲಾಗಿತ್ತು. ನಾಯಕರುಗಳು ಕೂಡ ಅದನ್ನೇ ಹೇಳಿಕೊಂಡು ಬಂದಿದ್ದರು. ಬಿಜೆಪಿ ಅಧಿಕಾರಕ್ಕೇರಲು ಬಿಡಲ್ಲ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದರು. ಆದರೆ ನಿನ್ನೆ ಶಾಸಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಸೂಚನೆ ನೀಡಿದ ಬೆನ್ನಲ್ಲೇ ಜೆಡಿಎಸ್ ತಟಸ್ಥ ನಿಲುವು ಅನುಸರಿಸಿದೆ. ಇದರಿಂದ ಬಿಜೆಪಿಗೆ ಅಧಿಕಾರ ಹಿಡಿಯುವ ಹಾದಿ ಸುಗಮವಾಗಿದೆ ಎನ್ನಲಾಗಿದೆ.
ಮೂರು ಪಕ್ಷಗಳು ಅಭ್ಯರ್ಥಿ ಹಾಕಿದ್ದು ಯಾವ ಪಕ್ಷಕ್ಕೂ ಬಹುಮತ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್-ಜೆಡಿಎಸ್ ಹಳೆ ದೋಸ್ತಿ ಮುರಿದುಬಿದ್ದಿದ್ದು ಕಾಂಗ್ರೆಸ್-ಜೆಡಿಎಸ್ ಗೆ ಮೇಯರ್ ಸ್ಥಾನದಿಂದ ವಂಚಿತವಾಗಿವೆ. ಹೀಗಾಗಿ ಕೊನೆಯ ಹಂತದಲ್ಲಿ ಬಿಜೆಪಿ ಮೇಯರ್ ಪಟ್ಟ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.ಪ್ರಾದೇಶಿಕ ಆಯುಕ್ತ ಪ್ರಕಾಶ್, ಮೈಸೂರು ನಗರ ಪಾಲಿಕೆ ಆಯುಕ್ತ ಜಿ ಲಕ್ಷ್ಮಿಕಾಂತ ರೆಡ್ಡಿ ರವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ರಾಮ್ದಾಸ್, ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆಟಿ.ಶ್ರೀಕಂಠೇಗೌಡ ಚುನಾವಣೆಯಲ್ಲಿ ಭಾಗಿಯಾಗಿದ್ದರು.