ಮೈಸೂರು: ಮತವನ್ನು ಮಾರಿಕೊಂಡರೆ ಜನಪ್ರತಿನಿಧಿಗಳ ಮೇಲಿನ ಹಿಡಿತ ಕೈತಪ್ಪಿಹೋಗಲಿದ್ದು, ಮತದಾರರು ಪ್ರಶ್ನಿಸುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಹೇಳಿದರು.
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ನಗರದ ಮಹಾನಗರ ಪಾಲಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜವಾಬ್ದಾರಿಯುತ ಸರ್ಕಾರವನ್ನು ಆಯ್ಕೆ ಮಾಡಲು ಸರ್ವರೂ ಮತದಾನದ ಹಕ್ಕನ್ನು ಚಲಾಯಿಸಬೇಕು. ಪ್ರತಿಯೊಂದು ಮತಕ್ಕೂ ತನ್ನದೆ ಆದ ಮೌಲ್ಯ ಇರುತ್ತದೆ. ಹಣ ಪಡೆದುಕೊಂಡು ಮತವನ್ನು ಮಾರಾಟ ಮಾಡಿದರೆ ಮೌಲ್ಯ ಹೊರಟು ಹೋಗುತ್ತದೆ ಎಂದು ಹೇಳಿದರು.
ಯುವ ಮತದಾರರು ಮತದಾನದ ಬಗ್ಗೆ ನಿರಾಸಕ್ತಿ ಹೊಂದಿದ್ದು, ತಮ್ಮ ಹಕ್ಕು ಚಲಾಯಿಸಲು ಆಸಕ್ತಿ ತೋರುತ್ತಿಲ್ಲ ಎಂಬ ಅಂಶವು 2010 ರಲ್ಲಿ ನಡೆಸಿದ ಸಮೀಕ್ಷೆಯೊಂದರಲ್ಲಿ ತಿಳಿದುಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗವು ಯುವ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಯೋಜನೆ ರೂಪಿಸಿತ್ತು. ಇದರ ಅಂಗವಾಗಿ 2011 ರಿಂದ ಪ್ರತಿವರ್ಷವೂ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರು ಮಾತನಾಡಿ, ವಿದ್ಯಾವಂತರು ಮತದಾನದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಬೇಸರದ ವಿಷಯ. 18 ವರ್ಷಕ್ಕಿಂತ ಮೇಲಿನ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಹೊಣೆಗಾರಿಕೆ ನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ ಭೂತೆ ಅವರು ಯುವ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಸ್ವೀಪ್ ವತಿಯಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸುವುದರ ಜೊತೆಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಜೆ.ರೂಪಾ, ಉಪ ಆಯಕ್ತರಾದ (ಆಡಳಿತ) ಎಂ.ಕೆ.ಸವಿತಾ ಸೇರಿದಂತೆ ಇತರರು ಹಾಜರಿದ್ದರು.