ಮೈಸೂರು ;ಮೈಸೂರು ಮಹಾನಗರಪಾಲಿಕೆ ಮೇಯರ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪ್ರಯತ್ನ ಮುಂದುವರೆದಿದೆ. ಈ ಬಾರಿ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.
ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸೂಚನೆಯಂತೆ ಮೇಯರ್ ಚುನಾವಣೆಗೆ ಮೈತ್ರಿ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಸಾ.ರಾ.ಮಹೇಶ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಇಂದು ಸಂಜೆ 4 ಗಂಟೆಗೆ ಜೆಡಿಎಸ್ ನಗರಪಾಲಿಕೆ ಸದಸ್ಯರ ಸಭೆ ಕರೆಯಲಾಗಿದೆ. ಸಭೆ ಬಳಿಕ ತಿಳಿಸುತ್ತೇನೆ ಎಂದಿದ್ದಾರೆ ಎಂದು ಹೇಳಿದರು.
ಜೆಡಿಎಸ್ ನಾಯಕರ ಜೊತೆ ಮಾತುಕತೆಯ ಜವಾಬ್ದಾರಿಯನ್ನು ಶಾಸಕ ತನ್ವೀರ್ ಸೇಠ್ ಗೆ ನೀಡಲಾಗಿದೆ. ನಾನೂ ಕೂಡಾ ಸಾರಾ ಮಹೇಶ್ ಜೊತೆ ಮಾತಮಾಡಿದ್ದೇನೆ. ಜೆಡಿಎಸ್ ನವರು ಯಾವುದೇ ಕಾರಣಕ್ಕೂ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ. ನಾವು ಮೈತ್ರಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಆ ರೀತಿ ಇದ್ದರೆ ನೇರವಾಗಿ ಸಾ.ರಾ.ಮಹೇಶ್ ಹೇಳುತ್ತಿದ್ದರು. ಸಭೆ ಆದ ಮೇಲೆ ತಿಳಿಸುತ್ತೇವೆ ಅಂತ ಹೇಳಿದ್ದಾರೆ ಎಂದರು.
ಒಡಂಬಡಿಕೆ ಪ್ರಕಾರ ನಮಗೆ ಮೇಯರ್ ಸ್ಥಾನವನ್ನು ಬಿಟ್ಟುಕೊಡಬೇಕು. ಈ 6 ತಿಂಗಳು ನಮಗೆ ಕೊಟ್ಟು ಮುಂದೆ ನಡೆಯುವ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಎರಡೂ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕು. ಆ ಪ್ರಕಾರ ನಮಗೆ ಬಿಡಿ ಅಂತ ನಾವು ಅವರಲ್ಲಿ ಮನವಿ ಮಾಡಿದ್ದೇವೆ. ಒಂದು ವೇಳೆ ಒಪ್ಪಲಿಲ್ಲವೆಂದರೆ ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇವೆ. ನಂತರ ಏನು ನಿರ್ಧಾರ ಮಾಡುತ್ತೇವೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಭೆ ಕರೆದಿದ್ದು, ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ ಎಂದರು.