ಮೈಸೂರು : ನಗರದ ಕೆಆರ್ಎಸ್ ರಸ್ತೆಯಲ್ಲಿರುವ ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು, 40ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕೆ,ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಯಾದವಗಿರಿಯಲ್ಲಿರುವ ರೈಲ್ವೆ ಕ್ವಾಟ್ರರ್ಸ್ ನಲ್ಲಿ ಸೋಮವಾರ 3 ಗಂಟೆ ಸಮಯದಲ್ಲಿ ಕೊಠಡಿಯೊಂದರಲ್ಲಿ ನೀರು ಶುದ್ಧೀಕರಣಕ್ಕಾಗಿ ಇರಿಸಲಾಗಿದ್ದ ಕ್ಲೋರಿನ್ ಸಿಲಿಂಡರ್ ಲೀಕ್ ಆಗಿದೆ. ಅನಿಲ ಸೋರಿಕೆಯಿಂದ ಅಕ್ಕಪಕ್ಕದ ಮನೆಯಲ್ಲಿದ್ದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಕೂಡಲೇ ರೈಲ್ವೆ ಆಸ್ಪತ್ರೆಗೆ ಎಲ್ಲರನ್ನು ದಾಖಲಿಸಿ ಆಕ್ಸಿಜನ್ ನೀಡಲಾಗಿದೆ. ಸಧ್ಯಕ್ಕೆ ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅನಿಲ ಸೋರಿಕೆ ತಡೆಯಲು ಅಗ್ನಿಶಾಮಕ ಮತ್ತು ರೈಲ್ವೆ ರಕ್ಷಣಾ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ದಾಸಪ್ಪ ವೃತ್ತದಿಂದ ಕೆಅರ್ಎಸ್ ರಸ್ತೆಯನ್ನು ಬಂದ್ ಮಾಡಲಾಗಿದೆ. ಜತೆಗೆ ಮೈಸೂರು-ಕೆಆರ್ಎಸ್ ರಸ್ತೆ ಬಂದ್ ಮಾಡಲಾಗಿದ್ದು ರೈಲ್ವೆ ಕ್ವಾಟ್ರಸ್ಗೆ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಿಬ್ಬಂದಿ ಸೋರಿಕೆ ತಡಿದಿದ್ದರೂ ರೈಲ್ವೆ ಕ್ವಾಟ್ರಸ್ ನಿವಾಸಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯರಾಮು, ಕ್ಲೋರಿನ್ ಸೋರಿಕೆಯನ್ನು ಸಂಪೂರ್ಣ ತಡೆಗಟ್ಟಲಾಗಿದೆ. ವಾತಾವರಣದಲ್ಲಿ ಇನ್ನೂ ಕ್ಲೋರಿನ್ ಇರುವುದರಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎಂದು ಹೇಳಿದರು.
ಕ್ಲೋರಿನ್ ಅನಿಲ ಸೋರಿಕೆಯಿಂದ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಸಮೀಪ ಇರುವ ನಿವಾಸಿಗಳಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಶಾಲೆಯಿಂದ ಮನೆಗೆ ಹೋಗುತ್ತಿದ್ದ ಮಹಾಜನ, ಸದ್ವಿದ್ಯಾ ಶಾಲೆಯ 10 ಮಕ್ಕಳು, ಕೆಆರ್ಎಸ್ಗೆ ಖಾಸಗಿ ಬಸ್ನಲ್ಲಿ ತೆರಳುತ್ತಿದ್ದ 29 ಮಂದಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಎಲ್ಲರನ್ನೂ ಚೆಲುವಾಂಬ ಹಾಗೂ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಆರೋಗ್ಯವಾಗಿದ್ದು, ಅಲ್ಪಪ್ರಮಾಣದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಕೇಂದ್ರದ ಕಾರ್ಯನಿರ್ವಾಹಕ ಎಂಜಿನಿಯರ್ ಸುವರ್ಣ ಪ್ರತಿಕ್ರಿಯೆ ನೀಡಿ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಕಾಂಪೌಂಡ್ಗೆ ಹೊಂದಿಕೊಂಡಿರುವ ರೈಲ್ವೆ ಇಲಾಖೆಗೆ ಸೇರಿದ ಜಾಗದಲ್ಲಿ ಸೋರಿಕೆಯಾಗಿದೆ. ಇದಕ್ಕೂ ನಮಗೂ ಸಂಬಂಧ ಇಲ್ಲ. ನೀರು ಸರಬರಾಜು ಕೇಂದ್ರದಲ್ಲಿ ಸೋರಿಕೆ ಆಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೇಂದ್ರದ ಸಿಬ್ಬಂದಿಯನ್ನು ಮುಂಚಿತವಾಗಿಯೇ ಮನೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎಲ್.ನಾಗೇಂದ್ರ ಭೇಟಿ ನೀಡಿ, ಅಸ್ವಸ್ಥಗೊಂಡಿರುವವರ ಯೋಗ ಕ್ಷೇಮ ವಿಚಾರಿಸಿದರಲ್ಲದೆ, ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ದೇವರ ಕೃಪೆಯಿಂದ ಹೆಚ್ಚಿನ ಅನಾಹುತವೇನೂ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಅಸ್ವಸ್ಥಗೊಂಡಿರುವರಿಗೆ ಜಾಗರೂಕತೆಯಿಂದ ಚಿಕಿತ್ಸೆ ನೀಡಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇದಕ್ಕೆ ಕಾರಣರಾದವರ ಮೇಲೆ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.