ಮೈಸೂರು: ಕಾಂಗ್ರೆಸ್ ನ ಘಟಾನುಘಟಿ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಗಾಗಿ ಜನಾಂದೋಲನ ಸಮಾವೇಶದ ಪ್ರಯುಕ್ತ ಬೃಹತ್ ಮೆರವಣಿಗೆ ನಡೆಸುವ ಮೂಲಕ ಶಕ್ತಿಪ್ರದರ್ಶಿಸಲಾಗಿದೆ.
ನಗರದ ಬಸವೇಶ್ವರ ವೃತ್ತದಿಂದ ಕಾಂಗ್ರೆಸ್ ಭವನದವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾದ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಅನಿಲ್ ಚಿಕ್ಕಮಾದು, ಡಾ.ಯತೀಂದ್ರ, ತನ್ವೀರ್ ಸೇಠ್, ಮಂಜುನಾಥ್ , ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಸೇರಿದಂತೆ ಮುಖಂಡರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮೆರವಣಿಗೆಯ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಂಟಿಯಾಗಿ ದೀಪಬೆಳಗುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದರು.
ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಿಂದ ಕಾರ್ಯಕ್ರಮ ನಡೆಸುವ ಮೂಕ ಒಗ್ಗಟ್ಟಿನ ಪ್ರದರ್ಶನ ಮಾಡುತ್ತಿದ್ದು, ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲವು ಸಾಧಿಸುವ ಮೂಲಕ ಅಧಿಕಾರ ಹಿಡಿಯುವುದಾಗಿ ಹೇಳಿದರು.
ದೆಹಲಿಯ ಗಡಿಯಲ್ಲಿ ರೈತರು ಸ್ವಾತಂತ್ರ್ಯದ ಹೋರಾಟ ನಡೆಸಿದ ರೀತಿಯಲ್ಲಿ ಸತ್ಯಾಗ್ರಹ ಮಾಡಿದರು. ಯಾವ ಸರ್ಕಾರದ ಬೆಂಬಲವನ್ನೂ ಪಡೆಯಲಿಲ್ಲ. 700ಮಂದಿ ಸತ್ತಿದ್ದಾರೆ. ಪಾರ್ಲಿಮೆಂಟ್ ನಡೆಯಲಿಲ್ಲ. ವಿರೋಧ ಪಕ್ಷ ಕಾಂಗ್ರೆಸ್ ಒಂದೂ ದಿನವೂ ಪಾರ್ಲಿಮೆಂಟ್ ನಡೆಯಲು ಬಿಡಲಿಲ್ಲ. ಕೊನೆಗೆ ರೈತರ ಹೋರಾಟ ಗೆದ್ದಿತು. ಪ್ರಧಾನಿಗಳೇ ರೈತರ ಮುಂದೆ ನನ್ನನ್ನು ಕ್ಷಮಿಸಿ ಎಂದು ಬೇಡಿಕೊಳ್ಳುವ ಪರಿಸ್ಥಿತಿ ಬಂತು. ನಾವು ಸಮಾವೇಶವನ್ನು ಶಕ್ತಿ ತೋರಿಸಲು ಮಾತ್ರವಲ್ಲ. ರಾಜ್ಯದ ಜನತೆಗೆ ಜಾಗೃತಿ ಮೂಡಿಸುವುದಕ್ಕಾಗಿ ಹಮ್ಮಿಕೊಂಡಿರುವುದಾಗಿ ಹೇಳಿದರಲ್ಲದೆ, ಕನಿಷ್ಠ ಒಂದು ಬೂತ್ ಗೆ 500 ಮಂದಿಯನ್ನಾದರೂ ನೊಂದಣಿ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮಾತನಾಡಿ ಬೂತ್ ಮಟ್ಟದಿಂದ ಸದಸ್ಯತ್ವ ನೋಂದಣಿ ಅಭಿಯಾನ ಮಾಡಲಾಗುವುದು. ಪ್ರತಿ ಬೂತ್ ಗೂ ಓರ್ವ ಪುರುಷ, ಓರ್ವ ಮಹಿಳಾ ಎನ್ ರೋಲರ್ ಇರಲಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನು ಡಿ.ಕೆ.ಶಿವಕುಮಾರ್ ಮಾಡಿದ್ದಾರೆ. ಐದು ವರ್ಷದ ಅವಧಿಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದಾರೆ ಎಂದು ಹೇಳಿದರಲ್ಲದೆ ಪಾದಯಾತ್ರೆಗೆ ಉತ್ತಮ ಸಹಕಾರ ನೀಡುವಂತೆ ಮನವಿ ಮಾಡಿದರು.