ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಅರಗ ಜ್ಞಾನೇಂದ್ರ ಅವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.
ಗೃಹ ಇಲಾಖೆ ಎಂದರೆ ಒಂದು ರಾಜ್ಯದಲ್ಲಿ ವಾಸಿಸುತ್ತಿರುವವರ, ಹಕ್ಕು, ಮಾನ, ಪ್ರಾಣ, ಆಸ್ತಿ-ಪಾಸ್ತಿಯ ರಕ್ಷಣೆ, ಸಮಾನತೆ ಮತ್ತು ಸೌಹಾರ್ದತೆಯನ್ನು ಕಾಪಾಡುವ ಕರ್ತವ್ಯವನ್ನು ಹೊಂದಿರುತ್ತದೆ. ಇದಕ್ಕೆ ಪೂರಕವಾಗಿಯೇ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿರುವ ಸಂದರ್ಭದಲ್ಲಿ ಚಾಮುಂಡಿ ಸಂಚಾರಿ ಸುರಕ್ಷತಾ ಪಡೆಗಳನ್ನು ನಿಯೋಜಿಸುವ ಮೂಲಕ ಸಮರ್ಪಕ ಸುರಕ್ಷತಾ ವಾತಾವರಣವನ್ನು ನಿರ್ಮಿಸುವ ಪ್ರಯತ್ನವನ್ನು ಮಾಡಿತ್ತು. ಇದು ರಾಜ್ಯದಲ್ಲಿ ರಕ್ಷಣಾ ವ್ಯವಸ್ಥೆಯ ದೃಷ್ಟಿಯಿಂದ ಮಾಡಿದ ಮೊದಲ ವಿನೂತನವಾದ ಪ್ರಯತ್ನವಾಗಿದ್ದು ಇದನ್ನು ಮೊದಲ ಬಾರಿಗೆ ಮೈಸೂರಿನಲ್ಲಿ ಪರಿಚಯಿಸಲಾಗಿತ್ತು ಎಂದು ಹೇಳಿದ್ದಾರೆ.
ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವರ ಹೇಳಿಕೆಯನ್ನು ಗಮನಿಸಿದರೆ ಇವರಿಗೆ ಜನ ಸಾಮಾನ್ಯರನ್ನು ಮತ್ತು ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಯಾವುದೇ ಉದ್ದೇಶ ಇದ್ದಂತೆ ಕಾಣುತ್ತಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರ ವರ್ತನೆಗಳು ಸಂವಿಧಾನಾತ್ಮಕವಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಇನ್ನು ಇಂತಹ ಅತ್ಯಾಚಾರ ಘಟನೆಗಳು ಸಾರ್ವಜನಿಕ ವ್ಯಕ್ತಿಗಳು ಮತ್ತು ಸಾರ್ವಜನಿಕವಾಗಿ ಬದ್ಧತೆ ಇರುವ ಯಾವುದೇ ವ್ಯಕ್ತಿಗಳು ಕೂಡಾ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ಗ್ಯಾಂಗ್ ರೇಪ್: ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ- ಎಚ್.ಸಿ.ಮಹದೇವಪ್ಪ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.