ಮೈಸೂರು: ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಸ್ವಚ್ಛ ಭಾರತ್ ಮಿಷನ್ ಅನುದಾನದಡಿಯಲ್ಲಿ ಖರೀದಿಸಿರುವ 16 ಟ್ರ್ಯಾಕ್ಟರ್ ಹಾಗೂ ಅಧಿಕಾರಿಗಳ ಸ್ಥಳ ಪರಿಶೀಲನಾ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಪಾಲಿಕೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಹನಗಳ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿ ಚಾಲಕರಿಗೆ ಕೀ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಕುರಿತು ಬಜೆಟ್ನಲ್ಲಿ ಘೋಷಣೆ ಆಗಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ. ಚಾಮುಂಡಿಬೆಟ್ಟದ ರಸ್ತೆ ಕಾಮಗಾರಿಗೆ ಈಗಾಗಲೇ 10ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಘಟನೆ ಬಳಿಕ ಲೋಕೋಪಯೋಗಿ ಸಚಿವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಚಾಮರಾಜನಗರದ ಕ್ವಾರಿ ಅನಾಹುತ ಕುರಿತು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲೂ ಅಕ್ರಮ ಗಣಿಗಾರಿಕೆ ನಡೆದರೆ ಪರಿಶೀಲನೆಗೆ ಸೂಚನೆ ನೀಡಲಾಗುವುದು. ಚಾಮರಾಜನಗರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಅಲ್ಲೇ ಇದ್ದಾರೆ. ಜಿಲ್ಲೆಯಲ್ಲಿಯೂ ಅಕ್ರಮ ಗಣಿಗಾರಿಕೆ ಕಂಡುಬಂದಲ್ಲಿ ಇಲಾಖೆಯ ಸಚಿವರ ಗಮನಕ್ಕೆ ತಂದು ಪರಿಶೀಲನೆ ನಡೆಸಲಾಗುವುದು ಎಂದರು.
ಪಾಲಿಕೆ ಮೇಯರ್ ಮೀಸಲಾತಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಪಾಲಿಕೆ ಬಜೆಟ್ ಬಳಿಕ ಮೀಸಲಾತಿ ಪ್ರಕಟಿಸಲಾಗುವುದು. ಈಗಿನ ಮೇಯರ್ ಎಲ್ಲ ಪಕ್ಷದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಒಳ್ಳೆ ಅನುದಾನದ ಜತೆಗೆ ಉತ್ತಮ ಆಡಳಿತ ನಡೆಸಿದ್ದಾರೆ. 16 ವಾರ್ಡ್ಗಳಿಗೆ 16 ಟ್ರ್ಯಾಕ್ಟರ್ ನೀಡಿದ್ದಾರೆ ಎಂದರು.