ಮೈಸೂರು: ಮೈಸೂರು ನಗರದಾದ್ಯಂತ ಸಿಆರ್ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಆದೇಶ ನೀಡಿದ್ದಾರೆ.
ನಿಷೇಧಾಜ್ಞೆಯು ಫೆ.11ರ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಜಾರಿಯಲ್ಲಿರಲಿದೆ. ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಅನಾಮಧೇಯವಾಗಿ ಪ್ರತಿಭಟನೆಗೆ ಕರೆಕೊಟ್ಟು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡಲು ಪ್ರಯತ್ನ ನಡೆಸುತ್ತಿರುವ ಹಿನ್ನಲೆಯಲ್ಲಿ ಮೈಸೂರು ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ, ಮೆರವಣಿಗೆಯನ್ನು ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನಿನ್ವಯ ಸೂಕ್ತ ಕ್ರಮಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ.