ಮೈಸೂರು : ರೂಪಾಂತರಿ ವೈರಸ್ ಓಮಿಕ್ರಾನ್ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಡಿ.28ರಿಂದ ಜ.7ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮನವಿ ಮಾಡಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಜ.7ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಈ ವೇಳೆ ತುರ್ತು ಸೇವೆಗಳಾದ ಮೆಡಿಕಲ್, ಆಸ್ಪತ್ರೆ ಹೊರತುಪಡಿಸಿ ಯಾವುದೇ ವ್ಯಾಪಾರ ವಹಿವಾಟಿಗೆ ಅವಕಾಶ ಇರುವುದಿಲ್ಲ. ವಾಹನ ಸಂಚಾರವನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ಗೂಡ್ಸ್ ವಾಹನಗಳಿಗೆ ಅವಕಾಶ ನೀಡಲಾಗಿದೆ. ರೈಲು, ಬಸ್ಗಳಲ್ಲಿ ಬರುವವರು ಟಿಕೆಟ್ ತೋರಿಸಬೇಕು. ಸುಮ್ಮನೆ ಸಂಚರಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.30ರಿಂದ ಜ.2ರವರೆಗೆ ಕೆಲ ನಿರ್ಬಂಧ ವಿಧಿಸಲಾಗಿದೆ. ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ರಾತ್ರಿ 10 ಗಂಟೆ ನಂತರ ಯಾವುದೇ ಸಂಭ್ರಮಾಚರಣೆಗೆ ಅವಕಾಶವಿಲ್ಲ. ಹೋಟೆಲ್, ರೆಸ್ಟೋರೆಂಟ್, ಪಬ್, ಬಾರ್ಗಳಲ್ಲಿ ಶೇ.50ರಷ್ಟು ಮೀರದಂತೆ ನಡೆಸಬೇಕು. 10 ಗಂಟೆ ಬಳಿಕ ಸಾರ್ವಜನಿಕ ಸ್ಥಳ, ಉದ್ಯಾನವನ, ರಸ್ತೆಗಳಲ್ಲಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾಮೂಹಿಕ ನೃತ್ಯ, ಡಿಜೆ ಸಾಂಗ್ ಹಾಕುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಆಯೋಜಕರು ಹಾಗೂ ಭಾಗವಹಿಸಿರುವವರ ಮೇಲೂ ಮೊಕದ್ದಮೆ ದಾಖಲಿಸಲಾಗುವುದು. ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.
ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಅಪಾರ ಸಾವು, ನೋವು ಸಂಭವಿಸಿತ್ತು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡರೂ ಸಾರ್ವಜನಿಕರ ವರ್ತನೆಯಲ್ಲಿ ಬದಲಾವಣೆ ತರುವುದು ಕಷ್ಟದ ಕೆಲಸ. ಮೊದಲ ಎರಡು ಅಲೆಗಳಲ್ಲಿ ನೂರಾರು ಮಂದಿ ಸ್ವಯಂ ಸೇವಕರಾಗಿ ಕೆಲಸ ಮಾಡಲು ಆಸಕ್ತಿ ತೋರಿ ಮುಂದೆ ಬಂದಿದ್ದರು. ಅಂತಹವರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಇಲಾಖೆಯಿಂದ ನೂತನ ಪ್ರಯತ್ನ ಮಾಡಲಾಗುತ್ತಿದೆ. ಜನಜಂಗುಳಿ ಇರುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತಿಳಿ ಹೇಳಲು ಆಸಕ್ತಿ ಇರುವವರಿಗೆ ಇಲಾಖೆಯಿಂದ ಮೈ ಕಾಪ್ ಹೆಸರಿನ ಗುರುತಿನ ಚೀಟಿ ನೀಡಲಾಗುತ್ತದೆ. ಆಸಕ್ತಿ ಇರುವವರು ಸಂಬಂಧಪಟ್ಟ ಠಾಣೆಗಳಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.