ರಾಮನಗರ: ರಕ್ತಹೀನತೆ ಸಮಸ್ಯೆಯಿಂದ ಮಹಿಳೆಯರು ಹಾಗೂ ಗರ್ಭಿಣಿಯರು ಬಳಲುತ್ತಿದ್ದು, ಮಕ್ಕಳು ಹದಿಹರೆಯ ವಯಸ್ಸಿಗೆ ಕಾಲಿಡುವ ಮೊದಲೇ ಸಾವನ್ನಪ್ಪುತ್ತಿರುವುದು ಆತಂಕದ ಬೆಳವಣಿಗೆ ಎಂದು ಐಎಚ್ಎಂಆರ್ ಸಂಸ್ಥೆಯ ಪ್ರಾಧ್ಯಾಪಕಿ ಡಾ.ದೀಪಶ್ರೀ ಹೇಳಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಯುನಿಸೆಫ್ ಹಾಗೂ ಐಎಚ್ಎಂಆರ್ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊರೋನ ಸೂಕ್ತ ಚಟುವಟಿಕೆಗಳು, ಅಪೌಷ್ಠಿಕತೆ ಹಾಗೂ ರಕ್ತಹೀನತೆ ಸಮಸ್ಯೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಆನ್ಲೈನ್ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದ ಶೇ.59ರಷ್ಟು ಮಕ್ಕಳು, ಹೆಂಗಸರು ಹಾಗೂ ಗರ್ಭಿಣಿಯರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ವಿವಿಧ ರೀತಿಯ ಗಂಭೀರ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಹಾಗೂ ಶೇ.38ರಷ್ಟು ಮಕ್ಕಳಲ್ಲಿ ವಯಸ್ಸಿಗೆ ತಕ್ಕ ತೂಕ ಹಾಗು ಎತ್ತರಕ್ಕೆ ತಕ್ಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದು ಮಕ್ಕಳು ಹದಿಹರೆಯ ವಯಸ್ಸಿಗೆ ಕಾಲಿಡದೆ ಸಾವನ್ನಪ್ಪುತ್ತಿದ್ದಾರೆ. ಇಂತಹ ಗಂಭೀರ ಸಮಸ್ಯೆ ಇರುವಂತಹರನ್ನು ಹತ್ತಿರದ ಎನ್ಆರ್ಸಿ ಕೇಂದ್ರಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರಕಿಸಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಾಗಿರುತ್ತದೆ ಎಂದರು.
ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು ಹಾಗೂ ಹದಿಹರೆಯ ಹೆಣ್ಣುಮಕ್ಕಳನ್ನು ಗುರುತಿಸಿ ಆರೋಗ್ಯ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಯವರಿಗೆ ಮಾಹಿತಿ ನೀಡಬೇಕು. ಹತ್ತಿರದ ಎನ್ಆರ್ಸಿ ಕೇಂದ್ರಗಳಿಗೆ ದಾಖಲಿಸಿ ಸೂಕ್ತ ರೀತಿಯ ಚಿಕಿತ್ಸೆ ಕೊಡಿಸಬೇಕು. ಗರ್ಭಿಣಿ, ಬಾಣಂತಿ, ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ಬಳಲುವುದನ್ನು ತಪ್ಪಿಸಲು ಸ್ಥಳೀಯವಾಗಿ ದೊರೆಯುವ ಸೊಪ್ಪು ತರಕಾರಿ, ಸಿರಿಧಾನ್ಯಗಳನ್ನು ಹೆಚ್ಚಾಗಿ ಬಳಸುವಂತೆ ಸಮುದಾಯದಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದರು.