ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಬರುವ ಸಿಂಧುವಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಶಾಸಕ ಜಿ.ಟಿ.ದೇವೇಗೌಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ಆಗಾಗ್ಗೆ ಸಿದ್ದರಾಮಯ್ಯ ಮತ್ತು ಜಿ.ಟಿ,ದೇವೇಗೌಡರು ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ದಾರಿ, ಮಾಡಿಕೊಟ್ಟಿದೆ. ಈ ಹಿಂದೆ 2018ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಮುಖಾಮುಖಿಯಾಗಿ ಜಿ.ಟಿ.ದೇವೇಗೌಡರ ಎದುರಲ್ಲಿ ಸಿದ್ದರಾಮಯ್ಯ ಸೋಲು ಕಂಡಿದ್ದರು. ಮುಖ್ಯಮಂತ್ರಿಯನ್ನೇ ಸೋಲಿಸಿದ ಖ್ಯಾತಿ ಜಿ.ಟಿ.ದೇವೇಗೌಡರದ್ದಾಗಿತ್ತು.
ಕಳೆದ ನಾಲ್ಕು ವರ್ಷಗಳಲ್ಲಿ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳಾಗಿದ್ದು, ಜೆಡಿಎಸ್ ನಲ್ಲಿ ಜಿ.ಟಿ.ದೇವೇಗೌಡರಿಗೆ ಹೆಚ್ಚಿನ ಮನ್ನಣೆ ಸಿಗದಿರುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ಅವರು ಪಕ್ಷದಲ್ಲಿ ತಟಸ್ಥರಾಗಿ ಉಳಿದಿದ್ದರು.ಅವರು ಕಾಂಗ್ರೆಸ್ ಗೆ ಸೇರುತ್ತಾರೆ ಎಂಬ ವದಂತಿಗಳು ಹರಡಿದೆಯಾದರೂ ಅದನ್ನು ಬಹಿರಂಗವಾಗಿ ಎಲ್ಲಿಯೂ ಹೇಳಿಲ್ಲ. ಹೀಗಾಗಿ ಆಗಾಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಎಲ್ಲರ ಕುತೂಹಲ ಕೆರಳಿಸಿದೆ.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಡಾ.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರಲ್ಲದೆ, ಅಂಬೇಡ್ಕರ್ ಅವರು ತಂದು ಕೊಟ್ಟ ಮೀಸಲಾತಿಯಿಂದಲೇ ನಾವು ರಾಜಕೀಯದಲ್ಲಿ ಈ ಮಟ್ಟಕ್ಕೆ ಬರಲು ಸಾಧ್ಯವಾಯಿತು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಜಿಟಿ ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ಮರಿಗೌಡ, ಕಡಕೋಳ ನಾಗರಾಜು ಸೇರಿದಂತೆ ಹಲವರು ಇದ್ದರು.