ಮೈಸೂರು, ಫೆ. 8 : ಹಿಜಾಬ್ ಧರಿಸಿಯೇ ವಿಧಾನಸಭೆ ಅಧಿವೇಶನಕ್ಕೆ ಬರುತ್ತೇನೆ, ಯಾರಿಗಾದರೂ ಧೈರ್ಯವಿದ್ದರೆ ತಡೆಯಲಿ ಎಂದು ಕಲಬುರಗಿ ಶಾಸಕಿ ಖನೀಜ್ ಫಾತೀಮಾ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಮೈಸೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಪ್ರಶ್ನಿಸಿದರು.
ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು. ಹಿಜಾಬ್ ವಿಚಾರದಲ್ಲಿ ಎಂಎಲ್ಸಿ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ ನೋಡಲು ಹಿಜಾಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತದಲ್ಲ. ಸಮವಸ್ತ್ರ ಶಿಸ್ತಿನ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದು ಹೇಳಿದರು.
ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶ
ಹಿಜಾಬ್ ವಿವಾದದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಾಬ್ ವಿವಾದ ಸೃಷ್ಟಿಯಾಗಿದೆ. ಹಿಜಾಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸವಾಗುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹರಿಹಾಯ್ದರು.
ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಸಮಸ್ಯೆ ಬಗೆಹರಿಸಬಹುದಿತ್ತು. ಆ ಆರು ಜನ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಹಿಂದೆ ವೀರಶೈವ ಲಿಂಗಾಯತ ಧರ್ಮ, ನಂತರ ಮತಾಂತರದ ವಿಷಯ ಗೋಹತ್ಯೆ, ಈಗ ಹಿಜಾಬ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್ ಅಪವಾದ ಮಾತ್ರ ಬಿಜೆಪಿ ಮೇಲೆ ಎಂದು ಈಶ್ವರಪ್ಪ ಕಿಡಿಕಾರಿದರು.