ಮೈಸೂರು: ಹೊಸವರ್ಷದ ಆರಂಭದ ದಿನವಾಗಿದ್ದರಿಂದ ಶನಿವಾರ ಅಪಾರ ಸಂಖ್ಯೆಯಲ್ಲಿ ಜನರು ದೇವಾಲಯಗಳತ್ತ ಆಗಮಿಸಿ ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿದರು.
ಮುಂಜಾನೆಯೇ ಚಾಮುಂಡಿಬೆಟ್ಟಕ್ಕೆ ತೆರಳಿ ಭಕ್ತರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆದವು. ಚಾಮುಂಡಿ ಪಾದದ ಮೂಲಕ ಸಾವಿರ ಮೆಟ್ಟಿಲುಗಳನ್ನೇರಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದರು.
ಮೈಸೂರು ವಿಜಯನಗರ ಒಂದನೇ ಹಂತದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸವರ್ಷದ ಪ್ರಯುಕ್ತ ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ಶ್ರೀಯೋಗಾನರಸಿಂಹಸ್ವಾಮಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಭಕ್ತರಿಗೆ ಲಡ್ಡು ಪ್ರಸಾದವನ್ನು ವಿತರಿಸಲಾಯಿತು.
ಇದೇ ವೇಳೆ ದೇವಾಲಯದ ಆವರಣದಲ್ಲಿ ದೇಗುಲಕ್ಕೆ ಆಗಮಿಸಿದ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡನ್ನು ಪ್ರೊ.ಭಾಷ್ಯಂ ಸ್ವಾಮೀಜಿಯವರ ನೇತೃತ್ವದಲ್ಲಿ ವಿತರಿಸಲಾಯಿತು. ವಿಶ್ವವನ್ನು ನಡುಗಿಸಿದ ಕೊರೊನಾ ಆದಷ್ಟು ಬೇಗ ತೊಲಗಿ ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತಾಗಲಿ. ನೂತನ ವರ್ಷದಲ್ಲಿ ಮಳೆ ಬೆಳೆಗಳು ಚೆನ್ನಾಗಿ ಆಗಿ ಎಲ್ಲರ ಮನೆಯಲ್ಲೂ ಸಂತಸ ನೆಲೆಸಲಿ ಎಂದು ಇದೇ ವೇಳೆ ದೇವರಲ್ಲಿ ಪ್ರಾರ್ಥಿಸಲಾಯಿತು.
ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೂ ಹೊಸ ವರ್ಷದ ಹಿನ್ನೆಲೆಯಲ್ಲಿ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಿಗ್ಗೆಯಿಂದಲೇ ಭಕ್ತರು ಕಪಿಲಾ ನದಿಯಲ್ಲಿ ಸ್ನಾನ ಮಾಡಿ ಸರದಿ ಸಾಲಿನಲ್ಲಿ ನಿಂತು ಶ್ರೀಕಂಠೇಶ್ವರಸ್ವಾಮಿಯ ದರ್ಶನ ಪಡೆದರು.