ಮೈಸೂರು: ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ 4.17 ಲಕ್ಷ ಮೌಲ್ಯದ 210 ಮೂಟೆ ಪಡಿತರ ಅಕ್ಕಿ ಹಾಗೂ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಹೆಬ್ಬಾಳ್ನಲ್ಲಿರುವ ಕೆಎಫ್ಸಿಐ ಗೋದಾಮಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಪಡಿತರ ಅಕ್ಕಿ ಸಿದ್ದಲಿಂಗಪುರ ಗ್ರಾಮದ ಬಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ. ಕೆಎ 09 ಡಿ 9686 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನನ್ನೂ ಸಹ ವಶಕ್ಕೆ ಪಡೆದಿದ್ದಾರೆ.
ಸಧ್ಯ ವಶಪಡಿಸಿಕೊಳ್ಳಲಾದ ಅಕ್ಕಿ, ಲಾರಿ ಹಾಗೂ ಚಾಲಕನನ್ನು ಮೇಟಗಳ್ಳಿ ಪೊಲೀಸರ ವಶಕ್ಕೆ ನೀಡಲಾಗಿದೆ. ಸ್ಥಳಕ್ಕೆ ಆಹಾರ ನಿರೀಕ್ಷಕ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಬ್ ಇನ್ಸ್ಪೆಕ್ಟರ್ ಶಬರೀಶ್ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್, ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಪೂವಯ್ಯ, ಪಿಎಸ್ಐ ಲೇಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.
ನಗರದಲ್ಲಿ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ನಗರದ ಬಹುತೇಕ ಕಡೆಗಳನ್ನು ಮನೆ ಮನೆಗೆ ಬಂದು ಅಕ್ಕಿಯನ್ನು ಕೆಜಿವೊಂದಕ್ಕೆ 15ರಂತೆ ಖರೀದಿ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿದ್ದು, ಇದನ್ನು ತಡೆಗಟ್ಟದ ಕಾರಣದಿಂದಾಗಿ ಸರ್ಕಾರ ಬಡವರಿಗೆ ನೀಡುವ ಅಕ್ಕಿ ದಂಧೆಕೋರರ ಪಾಲಾಗುತ್ತಿದ್ದು, ಬಳಿಕ ಅದಕ್ಕೆ ಪಾಲೀಸ್ ಕೊಡಿಸಿ ಹೆಚ್ಚಿನ ಬೆಲೆಗೆ ಮತ್ತೆ ಮಾರುಕಟ್ಟೆಗೆ ಬರುತ್ತಿದೆ. ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಬೇಕಾಗಿದೆ.