ಸರಗೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ ರಾಜ್ಯಾದ್ಯಂತ 212 ಅಭ್ಯರ್ಥಿಗಳು ಕಣಕ್ಕಿಳಿದಿದ್ದು ಎಚ್.ಡಿ.ಕೋಟೆಯಲ್ಲಿ ಆಪ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾದ ಕಾರಣ ಅಪ್ ಮುಖಂಡರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ.
ಈ ಸಂಬಂಧ ಆಪ್ ಮುಖಂಡ ಗ್ರಾಮೀಣ ಮಹೇಶ್ ಮಾತನಾಡಿ ನಾವು ಕಳೆದ ಒಂದು ವರ್ಷಗಳಿಂದ ಈ ಕ್ಷೇತ್ರದಲ್ಲಿ ಅಭ್ಯರ್ಥಿಯೊಂದಿಗೆ ಎರಡು ಬಾರಿ ಸುತ್ತಿ ಸಂಘಟನೆ ಮಾಡಲಾಗಿತ್ತು. ಇದರ ಪ್ರತಿಫಲವಾಗಿ 550 ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಚುನಾವಣೆಯನ್ನು ಎದುರಿಸಲು ಸಜ್ಜಾಗಿದ್ದರು. ಆದರೆ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬಂದರೆ ಸೂಕ್ತ ಎಂಬುದನ್ನು ಅವಲೋಕಿಸಿ ನಮ್ಮ ಎಲ್ಲಾ ಕಾರ್ಯಕರ್ತರು ಸೇರಿ ಚರ್ಚಿಸಿ ಕಾಂಗ್ರೆಸ್ ಗೆ ಬೆಂಬಲ ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದರು.
ಹಲವಾರು ಸರ್ವೆಗಳ ಪ್ರಕಾರ ಕಾಂಗ್ರೆಸ್ ಪಕ್ಷ ರಾಜ್ಯದ ಗದ್ದುಗೆ ಏರಲಿದ್ದು ಕ್ಷೇತ್ರದಲ್ಲಿಯೂ ಕೂಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಸಕರಾಗಲಿದ್ದು, ಹಲವಾರು ಅಭಿವೃದ್ಧಿ ಕೆಲಸಗಳು ಆಗಬಹುದೆಂಬ ನಿರೀಕ್ಷೆ ಇದೆ. ಕೋಟೆ ವಿಧಾನಸಭಾ ಕ್ಷೇತ್ರ ಹಿಂದುಳಿದ ಕ್ಷೇತ್ರವೆಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಆದರೆ ಅದಕ್ಕೆ ಕಾರಣವೇನು ಎಂದು ಕೇಳಿದಾಗ ಯಾರಲ್ಲಿಯೂ ಉತ್ತರ ಸಿಗುವುದಿಲ್ಲ. ಆದರೆ ಇತಿಹಾಸವನ್ನು ತಿರುಚಿ ನೋಡಿದರೆ ಒಂದು ಬಾರಿ ಹೊರತುಪಡಿಸಿದರೆ ಯಾವುದೇ ಸಂದರ್ಭದಲ್ಲಿ ಯಾವ ಪಕ್ಷ ಸರ್ಕಾರ ರಚಿಸಿರುತ್ತದೆಯೋ ಆ ಪಕ್ಷದ ಅಭ್ಯರ್ಥಿ ಕೋಟೆ ಕ್ಷೇತ್ರದಲ್ಲಿ ಗೆಲುವು ಕಾಣದಿರುವುದು ಕ್ಷೇತ್ರ ಹಿಂದುಳಿದಿರುವುದಕ್ಕೆ ಪ್ರಮುಖ ಕಾರಣವಾಗಿದೆ ಎಂದರು.
ಕ್ಷೇತ್ರದ ಹಾಲಿ ಶಾಸಕರ ಐದು ವರ್ಷದ ಅವಧಿಯ ಕೆಲಸ ಸಮಾಧಾನ ತಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕ್ಷೇತ್ರದಲ್ಲಿ ಯಾವ ಭಾಗದಲ್ಲಿ ಕೆಲಸ ಆಗಿದೆ ಯಾವ ಭಾಗದಲ್ಲಿ ಕೆಲಸ ಬಾಕಿ ಉಳಿದಿದೆ ಎಂಬುದರ ಅರಿವು ಹಾಲಿ ಶಾಸಕರಿಗೆ ಇರುವುದರಿಂದ ಮುಂದಿನ ದಿನಗಳಲ್ಲಿ ಆ ಸಮಸ್ಯೆಗಳನ್ನು ಬಗೆಹರಿಸುವ ನಿರೀಕ್ಷೆ ಮಾಡಬಹುದು. ಹೊಸಬರನ್ನು ಆಯ್ಕೆ ಮಾಡಿದರೆ ಅಭಿವೃದ್ಧಿಯಲ್ಲಿ ಹಿನ್ನಡೆಯೂ ಕೂಡ ಆಗಬಹುದು ಹೀಗಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಿದರು.