ಮೈಸೂರು: ರಾಜ್ಯದ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಇಡಿಎಸ್ಒ ವಿದ್ಯಾರ್ಥಿ ಸಂಘಟನೆಯವರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ, ಜು.7ಕ್ಕೆ ರಾಜ್ಯ ಸರ್ಕಾರ ತನ್ನ ಬಜೆಟ್ ಮಂಡನೆ ಮಾಡಲಿದೆ. ಈ ಬಜೆಟ್ ರಾಜ್ಯದ ಶಿಕ್ಷಣದ ಅಗತ್ಯಗಳು ಮತ್ತು ಶೈಕ್ಷಣಿಕ ಸವಾಲುಗಳಿಗೆ ಉತ್ತರವಾಗಿ, ವಿದ್ಯಾರ್ಥಿ ಪರವಾದ ಬಜೆಟ್ ಆಗಿ ರೂಪುಗೊಳ್ಳಲಿದೆ ಎಂಬ ನಿರೀಕ್ಷೆ ಇದೆ. ರಾಜ್ಯವ್ಯಾಪಿ ವಿದ್ಯಾರ್ಥಿಗಳ ಆಗ್ರಹಗಳನ್ನು ಒಳಗೊಂಡ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದೇವೆ ಎಂದರು.
ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಅನುದಾನ ಹೆಚ್ಚಿಸಬೇಕು. ಸರ್ಕಾರದ ಅನುದಾನದಿಂದಲೇ ವಿಶ್ವವಿದ್ಯಾನಿಲಯಗಳ ಆಡಳಿತ ನಿರ್ವಹಣೆಗಾಗಿ ಎಲ್ಲಾ ಸರ್ಕಾರಿ ವಿವಿಗಳಿಗೆ ಸರಿಯಾದ ಅನುದಾನ ನೀಡಬೇಕು.
ಸ್ಥಗಿತಗೊಂಡಿದ್ದ ಸೈಕಲ್ ವಿತರಣೆ, ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಹಾಗೂ ಟ್ಯಾಬ್ ವಿತರಣೆ ಪುನರಾರಂಭಿಸಬೇಕು. ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಒದಗಿಸಬೇಕು. ನೂತನವಾಗಿ ಘೋಷಣೆಯಾಗಿರುವ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡಬೇಕು. ನಮ್ಮ ರಾಜ್ಯದಲ್ಲಿ ಏಮ್ಸ್ ಸ್ಥಾಪನೆಗಾಗಿ ರಾಯಚೂರು ನಗರದ ಹೆಸರನ್ನು ಘೋಷಣೆ ಮಾಡಬೇಕು.
ಕಲಬುರಗಿ ನಗರದ ವಾಡಿ ಪಟ್ಟಣದಲ್ಲಿ ಒಂದು ಸರ್ಕಾರಿ ಪಿಯು ಕಾಜೇಜು ಸ್ಥಾಪಿಸಬೇಕು. ನೂತನವಾಗಿ ಸ್ವಯಂ ಹಣಕಾಸು ಸಂಸ್ಥೆಗಳನ್ನಾಗಿ ರಚಿಸಿರುವ ಸರ್ಕಾರಿ ಪದವಿ ಕಾಜೇಜುಗಳು ಹಾಗೂ ಸರ್ಕಾರಿ ಕ್ಲಸ್ಟರ್ ವಿವಿಗಳಿಗೆ ಅನುದಾನ ನೀಡಬೇಕು. ಸ್ವಯಂ ಹಣಕಾಸು ಉನ್ನತ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಕೈಬಿಡಬೇಕು. ಬೆಂಗಳೂರು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಯುವಿಸಿಇಯನ್ನು ಉಳಿಸಬೇಕು. ಯುವಿಸಿಇ-2021 ಕಾಯ್ದೆ ರದ್ದುಗೊಳಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ ಎಂದು ಆಗ್ರಹಿಸಿದರು.
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಹಾಗೂ ವಿಜ್ಞಾನ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ ನಿರ್ಮಿಸಬೇಕು. ಕುಸಿದು ಬಿದ್ದಿದ್ದ ರಸಾಯನಶಾಸ್ತ್ರ ಪ್ರಯೋಗಾಲವನ್ನು ಪುನರ್ ನಿರ್ಮಿಸಬೇಕು. ಕಾಲೇಜಿನ ಆವರಣದೊಳಗೆ ಇಂದಿರಾ ಕ್ಯಾಂಟೀನ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು. ಕಾಲೇಜಿಗೆ ಶೌಚಾಲಯ ಸ್ವಚ್ಛತೆ, ಕುಡಿಯುವ ನೀರು ಇನ್ನಿತರ ಮೂಲ ಸೌಕರ್ಯಗಳನ್ನು ಈ ಕೂಡಲೇ ಒದಗಿಸಬೇಕು. ಮಹಾರಾಣಿ ವಾಣಿಜ್ಯ ಕಾಲೇಜಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಮೈಸೂರಿನಲ್ಲಿ ಒಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.