ಮೈಸೂರು: ಜನತಾ ಪಕ್ಷ ಕಟ್ಟಿದ ಜಯಪ್ರಕಾಶ್ ನಾರಾಯಣ್ ಅವರ ಪಕ್ಷ ಉಳಿಸಿ ಬೆಳೆಸಿದ ಎಚ್.ಡಿ ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತಿದ್ದು, ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ಮಾತ್ರ ಬಿಜೆಪಿ ಜತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ಅದನ್ನು ಹೊರತುಪಡಿಸಿ ನಮ್ಮ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ ಎಂದು ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಮಾಡಿಕೊಂಡಿರುವ ಮಾತ್ರಕ್ಕೆ ನಮ್ಮ ತತ್ವ ಸಿದ್ಧಾಂತ ಒಂದಿಂಚು ಕೂಡ ಬದಲಾಗಲ್ಲ. ಬಿಜೆಪಿಯವರದು ಅವರಿಗೆ ನಮ್ಮದು ನಮಗೆ.
ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ನಾವು ಒಂದಾಗಿದ್ದೇವೆ, ಎಚ್ ಡಿಕೆ ಕೇಸರಿ ಶಾಲು ಹಾಕಿದ ಬಗ್ಗೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿ ಬಹಿರಂಗವಾಗಿಯೇ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಅವರು, ಕುಮಾರಸ್ವಾಮಿ ಧರಿಸಿದ್ದ ಶಾಲು ಬಿಜೆಪಿಯವರದ್ದಲ್ಲ, ಆಂಜನೇಯನ ಭಕ್ತ ನೀಡಿದ ಶಾಲು. ಆದರೆ, ಕಾಂಗ್ರೆಸ್ ನವರು ಅದನ್ನೇ ದೊಡ್ಡದು ಮಾಡಿದ್ದಾರೆ ಅಷ್ಟೆ ಎಂದು ಹೇಳಿದರು.