ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿ ಅಯೋಧ್ಯೆಯ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಿರುವ ಶಿಲ್ಪಿ ಅರುಣ ಯೋಗಿರಾಜ್ ಅವರನ್ನು ಸನ್ಮಾನಿಸಿದ್ದಾರೆ.
ಬಳಿಕ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿಗೃಹ ಉದ್ಘಾಟಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಇತ್ತೀಚಿಗೆ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಬಾಲ ರಾಮನ ಮೂರ್ತಿ ನಿರ್ಮಾಣ ಮಾಡಿದ ಅರಣು ಯೋಗಿರಾಜ್ ಅವರಿಗೆ ಸುತ್ತೂರು ಮಠ ಸನ್ಮಾನ ಮಾಡಿದೆ. ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖಾ ಮಠ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.
ಸುತ್ತೂರು ಮಠದ ಹಿಂದಿನ 24 ಮಠಾಧೀಶರನ್ನು ಸ್ಮರಿಸಿಕೊಳ್ಳುತ್ತೇನೆ. ಸುತ್ತೂರು ಮಠ ನಿಸ್ವಾರ್ಥ ಸೇವೆಯನ್ನು ಮಾಡಿಕೊಂಡು ಬರುತ್ತಿದೆ. ಅಹಮದಾಬಾದ್ ಕಾರ್ಯಕ್ರಮವನ್ನು ರದ್ದುಪಡಿಸಿ ಇಲ್ಲಿಗೆ ಬಂದಿದ್ದೇನೆ. ಸುತ್ತೂರು ಮಠದ ಕೊಡುಗೆಯನ್ನು ಬಿಜೆಪಿ ಸದಾ ಸ್ಮರಿಸಿಕೊಳ್ಳುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಸಾಂಸ್ಕೃತಿಕ, ಯೋಗ, ಆಯುರ್ವೇದ, ಸುರಕ್ಷತೆ ಮತ್ತು ಭದ್ರತೆ ಕ್ಷೇತ್ರಕ್ಕೆ ಬಹಳ ಒತ್ತು ನೀಡಿದ್ದಾರೆ ಎಂದು ತಿಳಿಸಿದರು.